ಕೋಲಾರ: ‘ಚುನಾವಣೆಯ ಪ್ರಮುಖ ಘಟ್ಟವಾದ ಮತದಾನ ಪ್ರಕ್ರಿಯೆಯಲ್ಲಿ ಯುವಕ ಯುವತಿಯರು ಸ್ವಪ್ರೇರಣೆಯಿಂದ ಭಾಗವಹಿಸಬೇಕು’ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಮಧುಲತಾ ಮೋಸಸ್ ಸಲಹೆ ನೀಡಿದರು.
ಕಾಲೇಜಿನ ಎನ್ಎಸ್ಎಸ್ ಘಟಕವು ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ‘ಮತದಾನ ಕುರಿತಂತೆ ಜಾಗೃತಿ ಮೂಡಿಸುವುದರ ಜತೆಗೆ ಪ್ರತಿ ವಿದ್ಯಾರ್ಥಿಯು ಕಡ್ಡಾಯವಾಗಿ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಅಭಿಪ್ರಾಯ ದಾಖಲಿಸಬೇಕು’ ಎಂದರು.
‘ನ್ಯಾಕ್ ಸಮಿತಿ ಸದಸ್ಯರು ಕಾಲೇಜಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಎನ್ಎಸ್ಎಸ್ ಶಿಬಿರಾರ್ಥಿಗಳು ಕಾಲೇಜು ಆವರಣ ಸ್ವಚ್ಛಗೊಳಿಸುವ ಮೂಲಕ ಸಾರ್ಥಕ ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
‘ಜಿಲ್ಲಾಡಳಿತವು ಶೇ 100ರಷ್ಟು ಮತದಾನಕ್ಕಾಗಿ ಸ್ವೀಪ್ ಸಮಿತಿ ಮೂಲಕ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಜನರಲ್ಲಿ ಮತದಾನದ ಜಾಗೃತಿ ಮೂಡಿಸಬೇಕು’ ಎಂದು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಶಂಕರಪ್ಪ ಮನವಿ ಮಾಡಿದರು.
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಚುನಾವಣೆ ನಡೆಯುತ್ತಿರುತ್ತದೆ. ಜನರಿಗೆ ತಮ್ಮ ಇಷ್ಟದ ಜನಪ್ರತಿನಿಧಿ ಮತ್ತು ಸರ್ಕಾರ ಆಯ್ಕೆ ಮಾಡಿಕೊಳ್ಳಲುಮತದಾನದ ಹಕ್ಕು ನೀಡಲಾಗಿದೆ. ಮತದಾರರು ಈ ಹಕ್ಕನ್ನು ವಿವೇಚನೆಯಿಂದ ಚಲಾಯಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಮತದಾನದ ಹಕ್ಕು ಕುರಿತು ಘೋಷಣೆ ಕೂಗಿ ಜನರಿಗೆ ಜಾಗೃತಿ ಮೂಡಿಸಿದರು. ಕಾಲೇಜಿನ ಪ್ರಾಧ್ಯಾಪಕ ಎ.ವಿ.ರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಶಶಿಧರ್ ಭಾಗವಹಿಸಿದ್ದರು.