ಶ್ರೀನಿವಾಸಪುರ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ಖಂಡಿಸಿ ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಗುರುವಾರ ಧರಣಿ ನಡೆಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್. ಸೂರ್ಯನಾರಾಯಣ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಮತ್ತು ದಲಿತರಿಗೆ ಸಂಬಂಧಿಸಿದ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ರೈತರು ಸರ್ಕಾರದ ಸೌಲಭ್ಯದಿಂದ ವಂಚಿತಾಗುವಂತೆ ಮಾಡಲಾಗಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತರ ಪಾಲಿಗೆ ಮರಣ ಶಾಸನದಂತಿದೆ. ರೈತರಲ್ಲದವರೂ ಸಹ ಕೃಷಿ ಭೂಮಿ ಖರೀದಿಸಲು ಅವಕಾಶ ಕಲ್ಪಿಸುವ ಈ ಕಾಯ್ದೆಯಿಂದ ಕೃಷಿ ಭೂಮಿ ಬಂಡವಾಳಶಾಹಿಯ ಕೈವಶವಾಗುವ ಎಲ್ಲ ಸಾಧ್ಯತೆ ಇದೆ’ ಎಂದು ದೂರಿದರು.
ಕೋವಿಡ್ –19 ಕಾರಣ ಸಂಕಷ್ಟದಲ್ಲಿರುವವರಿಗೆ ಸಮಗ್ರ ಪರಿಹಾರ ನೀಡಬೇಕು. ಕಾರ್ಮಿಕ ಕಾನೂನುಗಳ ತಿದ್ದುಪಡಿ ಕೈಬಿಡಬೇಕು. ಸಾಮಾಜಿಕ ಭದ್ರತಾ ಯೋಜನೆ ಜಾರಿಗೆ ತರಬೇಕು. ಸಮಾನ ಕನಿಷ್ಠ ವೇತನ ನಿಗದಿ ಪಡಿಸಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು. ಅಂಗನವಾಡಿ ಹಾಗೂ ಗ್ರಾಮ ಪಂಚಾಯಿತಿ ನೌಕರ ಬಾಕಿ ವೇತನದ ಪಾವತಿಸಬೇಕು. ಎಲ್ಲ ಕಾಯ್ದೆಗಳ ತಿದ್ದುಪಡಿ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ ನವೀನ್ ಕುಮಾರ್, ‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಸಮಾಜದ ಎಲ್ಲ ವರ್ಗದ ಜನರೂ ಸಾಂಘಿಕ ಪ್ರತಿಭಟನೆ ನಡೆಸಬೇಕು. ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳು ಜಾರಿಗೆ ತರುವುದನ್ನು ತಡೆಯಬೇಕು’ ಎಂದು ಹೇಳಿದರು.
ನಿರಂತರವಾಗಿ ಪ್ರತಿಭಟನೆ ಮಾಡಬೇಕು. ಶ್ರಮಿಕರ ಪರವಾಗಿ ಧ್ವನಿಯೆತ್ತುವುದು ಕಾರ್ಮಿಕ ಸಂಘಟನೆಗಳ ಕರ್ತವ್ಯ ಎಂದರು.
ಅಂಗನವಾಡಿ, ಗ್ರಾಮ ಪಂಚಾಯಿತಿ, ಅಕ್ಷರ ದಾಸೋಹ, ಕಟ್ಟಡ, ಹಮಾಲಿ ಮತ್ತಿತರ ಸಂಘ ಸಂಸ್ಥೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬಳಿಕಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.