ಮಾಲೂರು: ತಾಲ್ಲೂಕಿನ ಬಹುನಿರೀಕ್ಷಿತ ಕುಡಿಯುವ ನೀರಿನ ಯೋಜನೆಯ ಯರಗೋಳ್ ಡ್ಯಾಂ ಅನ್ನು ನ.11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ತಾಲ್ಲೂಕು ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ಪಟ್ಟಣ ವ್ಯಾಪ್ತಿಯ ಜನತೆಗೆ ಕುಡಿಯುವ ನೀರು ಒದಗಿಸುವ ಯೋಜನೆಉ ಉದ್ಘಾಟನೆ ನಡೆಯಲಿದೆ. ಇದಕ್ಕೆ ಮಾಲೂರಿನಿಂದ ಸುಮಾರು 10 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ ಎಂದರು.
ಈ ಉದ್ಘಾಟನಾ ಕಾರ್ಯಕ್ರಮ ಎರಡು ತಿಂಗಳ ಮೊದಲೇ ಆಗಬೇಕಾಗಿತ್ತು. ಆದರೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಲೂರು ವ್ಯಾಪ್ತಿಯಲ್ಲಿ ಅಳವಡಿಸಲಾಗಿದ್ದ ಪೈಪ್ಲೈನ್ ಕಾಮಗಾರಿ ಕಳಪೆಯಾಗಿದ್ದು, ಜತೆಗೆ ಹಲವು ಪೈಪ್ಲೈನ್ ಅಳವಡಿಸದ ಕಾರಣ ವಿಳಂಬವಾಗಿದೆ. ಕೋಲಾರ ಮತ್ತು ಬಂಗಾರಪೇಟೆ ಪಟ್ಟಣಗಳಲ್ಲಿ ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದೆ. ತಾಲ್ಲೂಕಿನ ಟೇಕಲ್ ಗ್ರಾಮದವರೆಗೆ ಪೈಪ್ಲೈನ್ ಅಳವಡಿಸಿದ್ದು, ನ.11ರೊಳಗೆ ಮಾಲೂರು ಪಟ್ಟಣದವರೆಗೂ ಪೈಪ್ಲೈನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಡ್ಯಾಂ ಬಳಿಯೇ ಸಾರ್ವಜನಿಕರ ಸಭೆಯನ್ನು ಆಯೋಜಿಸಲಾಗಿದ್ದು, ಸಭೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಕಾಂಗ್ರೆಸ್ ಮುಖಂಡರು, ಜಿಲ್ಲೆಯ ಎಲ್ಲಾ ಶಾಸಕರು ಸೇರಿದಂತೆ 25 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್, ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯನಾರಸಿಂಹ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಚ್.ಚನ್ನರಾಯಪ್ಪ, ಎಪಿಎಂಸಿ ಮಾಜಿ ನಿರ್ದೇಶಕ ಸಬ್ದಾರ್ ಬೇಗ್, ಬಾಳಿಗಾನಹಳ್ಳಿ ಶ್ರೀನಿವಾಸ್ ಭಾಗವಹಿಸಿದ್ದರು.