ಶ್ರೀನಿವಾಸಪುರ: ‘ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಬೇಕು. ಜ್ಞಾನಾರ್ಜನೆಗೆ ಮೊದಲ ಆದ್ಯತೆ ನೀಡಬೇಕು’ ಎಂದು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಎಂ. ವೇಮಣ್ಣ ಹೇಳಿದರು.
ಪಟ್ಟಣದ ಸರ್ಕಾರಿ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಯಲು ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು, ಯುವಜನರು ದೇಶದ ನಿಜವಾದ ಶಕ್ತಿ. ತಮ್ಮ ಬುದ್ಧಿವಂತಿಕೆ ಮತ್ತು ಸಾಮರ್ಥ್ಯವು ದೇಶದ ಅಭಿವೃದ್ಧಿಗೆ ನೆರವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯಶಿಕ್ಷಕ ಎಂ. ಬೈರೇಗೌಡ ಮಾತನಾಡಿ, ಮನುಷ್ಯ ಎಷ್ಟು ಕಾಲ ಜೀವಿಸುತ್ತಾನೆ ಎಂಬುದು ಮುಖ್ಯವಲ್ಲ. ತನ್ನ ಜೀವಿತಾವಧಿಯಲ್ಲಿ ಸಮಾಜಕ್ಕೆ ಏನು ಕೊಡುಗೆ ನೀಡಿದ್ದಾನೆ ಎಂಬುದು ಮುಖ್ಯ ಎಂದರು.
ಸ್ವಾಮಿ ವಿವೇಕಾನಂದರು 39 ವರ್ಷ ಜೀವಿಸಿದ್ದರೂ ವಿಶ್ವಮಾನ್ಯರಾದರು. ಅವರ ಚಿಂತನೆಗಳು ಜಗತ್ತಿನ ಗಮನ ಸೆಳೆದವು. ಸರ್ವ ಜನಾಂಗದ ಗೌರವಕ್ಕೆ ಪಾತ್ರರಾದ ಅವರು ಯುವ ಸಮುದಾಯಕ್ಕೆ ಸಾರ್ವಕಾಲಿಕ ಮಾದರಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಸ್ವಾಮಿ ವಿವೇಕಾನಂದರ ಕನಸು ನನಸಾಗಲು ಪ್ರತಿಯೊಬ್ಬರು ಪ್ರಯತ್ನಿಸಬೇಕು. ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾದ ಚಟುವಟಿಕೆ ಕೈಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಗಮನ ನೀಡಬೇಕು. ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಹೇಳಿದರು.