ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಲು ಸರ್ಕಾರ ಬದ್ಧವಿದೆ. ಯೋಜನೆಗೆಂದೆ ರೂ. 200 ಕೋಟಿ ಮೀಸಲಿಡಲಾಗಿದೆ. ಒಂದು ಪೈಸೆಯನ್ನು ವ್ಯರ್ಥ ಮಾಡದೆ ಬಳಕೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಡಿ.ವಿ.ಸದಾನಂದಗೌಡ ಇಲ್ಲಿ ಶುಕ್ರವಾರ ತಿಳಿಸಿದರು.
ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನೀರಾವರಿ ಯೋಜನೆ ಬಗ್ಗೆ ಪದೆಪದೆ ಮಾತನಾಡಲು ಇಚ್ಛಿಸುವು ದಿಲ್ಲ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಪ್ರಯತ್ನಿಸುತ್ತೇನೆ ಎಂದರು.
`ತ್ರಿಮೂರ್ತಿ~ಗಳು ಒಂದೆಡೆ ಸೇರುತ್ತಿ ್ದದೀರಿ, ಭಿನ್ನಮತವಿಲ್ಲ ಎಂಬುದನ್ನು ಸಾಬೀತುಪಡಿಸಲು ಸಮಾವೇಶ ನಡೆಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೀವು ಹೇಗೆ ಬೇಕಾದರೂ ಅರ್ಥಮಾಡಿಕೊಳ್ಳಿ. ನಮ್ಮಲ್ಲಿ ಭಿನ್ನಮತವಿಲ್ಲ. ಪಕ್ಷವನ್ನು ಬಲಪಡಿಸುವ, ಕಾರ್ಯಕರ್ತರೊಂದಿಗೆ ಮುಖಾಮುಖಿಯಾಗುವ ಉದ್ದೇಶ ದಿಂದ ಈ ಸಮಾವೇಶ ನಡೆಸುತ್ತಿದ್ದೇವೆ ಎಂದು ಹೇಳಿದರು.
ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ, ದಲಿತ ಸಂಘರ್ಷ ಸಮಿತಿ, ಜೀತ ವಿಮುಕ್ತಿ ಕರ್ನಾಟಕ ಸಂಘಟನೆ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಜಮೀನು ಕಳೆದು ಕೊಂಡ ರೈತರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಸಲ್ಲಿಸಿದ ಮನವಿಪತ್ರ ಸ್ವೀಕರಿಸಿದರು. ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವ ಭರವಸೆ ನೀಡಿದರು.
ಮುಖ್ಯಮಂತ್ರಿಯನ್ನು ಬರಮಾಡಿ ಕೊಳ್ಳಲು ಬಿಜೆಪಿ ಮುಖಂಡರು, ಶಾಸಕರು, ನಗರಸಭೆ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಆದಿ ಚುಂಚನಗಿರಿ ಮಠದಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆದ ಸದಾನಂದ ಗೌಡ, ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡರು. ನಂತರ ಬೆಂಗಳೂರು ಗ್ರಾಮಾಂತರ ವಿಭಾಗದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು.