ಕೊಪ್ಪಳ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಶ್ರೀಕಾಂತ ಶಿವಪುರ ಎಂಬ ವ್ಯಕ್ತಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂಸೆಷನ್ಸ್ ನ್ಯಾಯಾಧೀಶ ಶಂಕರ.ಎಂ.ಜಾಲವಾದಿ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಜಿಲ್ಲೆಯ ಗ್ರಾಮವೊಂದರ ಅಪ್ರಾಪ್ತೆಗೆ ಮದುವೆಯಾಗುವುದಾಗಿ ಪುಸಲಾಯಿಸಿ, ಫಿರ್ಯಾದಿ ದಾಖಲಾಗುವ 7 ತಿಂಗಳ ಹಿಂದೆ ಅತ್ಯಾಚಾರ ಎಸಗಿದ್ದರಿಂದ ಅಪ್ರಾಪ್ತೆಯು ಜಿಲ್ಲಾಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು.
ಈ ಕುರಿತು ಕೊಪ್ಪಳ ಗ್ರಾಮೀಣ ವೃತ್ತ ಸಿಪಿಐ ರವಿ ಉಕ್ಕುಂದ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಅಪರಾಧಿಗೆ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ, ದಂಡದ ಮೊತ್ತದಲ್ಲಿ ₹20 ಸಾವಿರ ಸಂತ್ರಸ್ತಳಿಗೆ ನೀಡುವಂತೆ ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.