ಕುಷ್ಟಗಿ: ಪಟ್ಟಣದ ಸಂತೆ ಮೈದಾನದಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ತಾಲ್ಲೂಕು ಕ್ರೀಡಾಂಗಣದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಕುಚಿತ ಭಾವನೆ ತೊರೆದು ಪ್ರತಿಯೊಬ್ಬರೂ ವಿಶಾಲ ಮನಸ್ಸಿನಿಂದ ಬದುಕುವ ಕಲೆಯನ್ನು ರೂಢಿಸಿಕೊಳ್ಳಬೇಕು. ಭಯೋತ್ಪಾದನೆಯಂತಹ ಕೃತ್ಯಗಳು ಗಣತಂತ್ರ ವ್ಯವಸ್ಥೆಗೆ ಮಾರಕ. ಶಾಂತಿ ಸ್ಥಾಪನೆ ವಿಷಯದಲ್ಲಿ ಪ್ರತಿಯೊಬ್ಬ ಪ್ರಜೆ ತನ್ನ ಜವಾಬ್ದಾರಿ ನಿಭಾಯಿಸಬೇಕು ಎಂದು ಹೇಳಿದರು.
ತಮ್ಮ ಅವಧಿಯಲ್ಲಿನ ತಾಲ್ಲೂಕಿನ ಅಭಿವೃದ್ಧಿ ವಿವರಿಸಿ, ಸುಮಾರು ₨900 ಕೋಟಿ ವಿವಿಧ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಜನರ ನಿರೀಕ್ಷೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಪ್ರಾಮಾಣಿಕ ರೀತಿಯಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸಿರುವುದಾಗಿ ಹೇಳಿದರು.
ತಾಲ್ಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಎಂ.ಗಂಗಪ್ಪ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಮಹೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಹಾಂತಮ್ಮ ಪೂಜಾರ, ಪುರಸಭೆ ಅಧ್ಯಕ್ಷ ಖಾಜಾ ಮೈನುದ್ದೀನ್ ಮುಲ್ಲಾ, ಎಪಿಎಂಸಿ ಅಧ್ಯಕ್ಷ ಬಾಲಪ್ಪ ಚಾಕ್ರಿ, ಪೊಲೀಸ್ ಇನ್ಸ್ಪೆಕ್ಟರ್ ಸುರೇಶ ತಳವಾರ, ಕೃಷಿ ಸಹಾಯಕ ನಿರ್ದೇಶಕ ವೀರಣ್ಣ ಕಮತರ ಇದ್ದರು. ಡಾ.ಡಿ.ಮೋಹನ್ ಸ್ವಾಗತಿಸಿದರು. ನಾಗಪ್ಪ ಬಿಳಿಯಪ್ಪನವರ ನಿರೂಪಿಸಿದರು. ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಂತೆ ಮೈದಾನದಲ್ಲಿ ಅಧ್ಯಕ್ಷತೆ ವಹಿಸಿದ್ದ ಪುರಸಭೆ ಸದಸ್ಯ ಖಾಜಾ ಮೈನುದ್ದೀನ್ ಮುಲ್ಲಾ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಹಾಂತಮ್ಮ ಪೂಜಾರ, ಪುರಸಭೆ ಉಪಾಧ್ಯಕ್ಷೆ ಜ್ಯೋತಿ ಸೇಬಿನಕಟ್ಟಿ, ಪ್ರಭಾರ ಮುಖ್ಯಾಧಿಕಾರಿ ನಾಗರಾಜ ಇದ್ದರು. ಶರಣಪ್ಪ ವಡಗೇರಿ ನಿರೂಪಿಸಿದರು.
ಸಜ್ಜಲಗುಡ್ಡ ಶರಣಮ್ಮ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಧ್ಯಕ್ಷ ಸಿ.ಎಂ.ಹಿರೇಮಠ. ತಳುವಗೇರಾದಲ್ಲಿನ ವಿರುಪಾಕ್ಷಲಿಂಗ ಪತ್ತಿನ ಸೌಹಾರ್ದ ಸಹಕಾರ ಸಂಘದಲ್ಲಿ ಅಧ್ಯಕ್ಷ ಮಲ್ಲಪ್ಪ ಗೊಣ್ಣಾಗರ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.