ಕೊಪ್ಪಳ: ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಮೇಲಿಂದ ಮೇಲೆ ಸುರಿದ ಮಳೆಯಿಂದಾಗಿ ಅತಿಯಾಗಿ ತೇವಗೊಂಡಿದ್ದ ಮಣ್ಣಿನ ಮನೆ ಬುಧವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ವೃದ್ಧೆ ಸ್ಥಳದಲ್ಲಿಯೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಕೊಪ್ಪಳ ತಾಲ್ಲೂಕಿನ ಮತ್ತೂರಿನಲ್ಲಿ ಘಟನೆ ನಡೆದಿದ್ದು, ಬಸಮ್ಮ ಶಿವನಗೌಡ ಮೇಟಿ (65) ಮೃತಪಟ್ಟವರು. ಬಸಮ್ಮ ಅವರ ಗಂಡ ಶಿವನಗೌಡ ಮತ್ತು ಶಂಕ್ರಮ್ಮ ಎಂಬುವರಿಗೆ ಗಾಯಗಳಾಗಿವೆ. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
‘ನಿರಂತರವಾಗಿ ಸುರಿದ ಮಳೆಯಿಂದಾಗಿ ಮಣ್ಣಿನ ಮನೆ ತೇವಗೊಂಡಿತ್ತು. ಬುಧವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ. ಮನೆಯೊಳಗೆ ಅಡುಗೆ ಮಾಡುತ್ತಿದ್ದ ಬಸಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯರು ತಿಳಿಸಿದರು. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.