ಕುಕನೂರು: ‘ಕೊರೊನಾ ಕಾರಣಕ್ಕೆ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದ್ದಕ್ಕೆ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ’ ಎಂದು ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಮಾಧವಿ ಗಜಾನನ ವೈದ್ಯ ಹೇಳಿದರು.
ತಾಲ್ಲೂಕಿನ ಮಂಡಲಗೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿಯಿಂದ ಹಮ್ಮಿಕೊಂಡಿದ್ದ ಅಂಗನವಾಡಿ ಕೇಂದ್ರಗಳ ಪ್ರಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದಾದ್ಯಂತ ಹಂತ ಹಂತವಾಗಿ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಶಿಕ್ಷಣ ಕ್ಷೇತ್ರದ ಭದ್ರ ಬುನಾದಿಯಾಗಿ ಕೆಲಸ ಮಾಡುವ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಕರು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ ದೊಡ್ಡಮನಿ ಹೂ ನೀಡಿ ಮಕ್ಕಳನ್ನು ಸ್ವಾಗತಿಸಿದರು.