ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ವಾಸುದೇವ ಮೇಟಿ ಬಣ) ಸೆ. 12ರಂದು ಬೆಂಗಳೂರು ಚಲೊ ಹಮ್ಮಿಕೊಂಡಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಸಮಿತಿ ಸದಸ್ಯ ಎಂ. ಪ್ರಕಾಶ ‘ಅಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರೈತರ ನಡಿಗೆ ವಿಧಾನಸೌಧ ಕಡೆಗೆ ಹಮ್ಮಿಕೊಳ್ಳಲಾಗಿದೆ. ಕೊಪ್ಪಳ ಜಿಲ್ಲೆಯಿಂದ ಅಂದಾಜು ಒಂದು ಸಾವಿರ ಜನ ಬರಲಿದ್ದಾರೆ’ ಎಂದು ತಿಳಿಸಿದರು. ಸೆ. 11ರಂದು ರಾತ್ರಿ 8.30ರಂದು ಹಂಪಿ ಎಕ್ಸ್ಪ್ರೆಸ್ ರೈಲಿನ ಮೂಲಕ ತೆರಳಲಾಗುವುದು ಎಂದರು.
‘ಮೂರು ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರವೂ ವಾಪಸ್ ಪಡೆಯಬೇಕು. ಬೆಳೆಗಳಿಗೆ ಸೂಕ್ತ ಬೆಲೆ ಕೊಡಬೇಕು. ವಿಜಯನಗರ, ರಾಯಚೂರು, ಕೊಪ್ಪಳ ಬಳ್ಳಾರಿ ಮತ್ತು ರಾಯಚೂರಿನಲ್ಲಿ ಸ್ಥಗಿತಗೊಂಡಿರುವ ಸಕ್ಕರೆ ಕಾರ್ಖಾನೆಗಳನ್ನು ಪುನರ್ ಆರಂಭಿಸಬೇಕು’ ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿ ಬಹದ್ದೂರ್ ಬಂಡಿ, ರಾಜ್ಯ ಉಪಾಧ್ಯಕ್ಷ ದೇವರಮನಿ ಮಹೇಶ, ಹೊಸಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ರವಿರಾಜು, ಕೂಡ್ಲಿಗಿ ತಾಲ್ಲೂಕು ಘಟಕದ ಅಧ್ಯಕ್ಷ ಬಣಕಾರ ಕೊಟ್ರೇಶ ಇದ್ದರು.