ಕೊಪ್ಪಳ: ‘ಬೆಂಗಳೂರಿನ ವಿಧಾನಸೌಧದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಪ್ರಜಾಪ್ರಭುತ್ವದ ದೇಗುಲ ಅಪವಿತ್ರ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಬಿಜೆಪಿ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರಮುಖರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಕೊಪ್ಪಳ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ’ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಅನಗತ್ಯವಾಗಿ ದೇಶ ವಿರೋಧಿ ಕೃತ್ಯಕ್ಕೆ ಸಹಕಾರ ನೀಡುತ್ತಿದೆ’ ಎಂದು ನಾಯಕರು ಆರೋಪಿಸಿದರು.
ಗ್ರಾಮೀಣ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ನಗರ ಮಂಡಲ ಅಧ್ಯಕ್ಷ ರಮೇಶ ಕವಲೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮೌನೇಶ ದಢೇಸೂಗೂರು, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೀರ್ತಿ ಪಾಟೀಲ್, ಮುಖಂಡರಾದ ಮಹಾಂತೇಶ ಪಾಟೀಲ್, ಫಕೀರಪ್ಪ ಆರೇರೆ, ಬಸವರಾಜ ಇಂದರಗಿ, ಶಂಕರ್ ಪೂಜಾರ, ಮಹಾಲಕ್ಷ್ಮೀ ಕಂದಾರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಎಬಿವಿಪಿ ಪ್ರಮುಖರು ಇಲ್ಲಿನ ತಾಲ್ಲೂಕು ಕ್ರೀಡಾಂಗಣದಿಂದ ಅಶೋಕ ವೃತ್ತದ ತನಕ ಪ್ರತಿಭಟನೆ ನಡೆಸಿ ‘ಘೋಷಣೆ ಕೂಗುವ ಸಂದರ್ಭದಲ್ಲಿ ಅವರ ಪಕ್ಕದಲ್ಲಿ ಇರುವ ವ್ಯಕ್ತಿಗಳು ಸಹಿತ ತಡೆಯುವುದಕ್ಕೆ ಪ್ರಯತ್ನ ಮಾಡಲಿಲ್ಲ. ಅಲ್ಲೇ ಇದ್ದ ನಾಸೀರ್ ಹುಸೇನ್ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣಕ್ಕೆ ಮೇಲಿಂದ ಮೇಲೆ ಇಂಥ ಘಟನೆಗಳು ನಡೆಯುತ್ತಿವೆ’ ಎಂದು ದೂರಿದರು.
ಎಬಿವಿಪಿ ಮುಖಂಡ ಶಶಾಂಕ್ ಪಾಟೀಲ್, ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್, ತಾಲ್ಲೂಕು ಸಂಚಾಲಕ ಕೃಷ್ಣ ಪ್ರಸಾದ್, ರಾಜ್ಯ ಕಾರ್ಯಕಾರಣಿ ಸದಸ್ಯ ಶಶಿಕುಮಾರ್, ರಾಧಿಕಾ, ಗಣೇಶ್, ಶಿವುರಡ್ಡಿ , ಮಹೇಶ್ ಅರುಣ್, ಸಂಜಯ್, ವಿಶ್ವಾಸ್ ಸುಮಂಗಲ, ರೇಣುಕಾ ಭಾಗವಹಿಸಿದ್ದರು.
ಕೊಪ್ಪಳದ ಅಶೋಕ ವೃತ್ತದಲ್ಲಿ ಬುಧವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು