ಚಿಕ್ಕಬೆಣಕಲ್ (ಗಂಗಾವತಿ): ‘ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ಮೋಹನ್ ಸಲಹೆ ನೀಡಿದರು.
ತಾಲ್ಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ವತಿಯಿಂದ ಮಂಗಳವಾರ ಕೋವಿಡ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೊರೊನಾ 2ನೇ ಅಲೆ ಶುರುವಾಗಿದ್ದು, ತಾಲ್ಲೂಕಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಹಾಗಾಗಿ ಗ್ರಾಮಸ್ಥರು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು. 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಬೇಕು. ಇದರಿಂದ ಅಡ್ಡಪರಿಣಾಮ ಆಗುವುದಿಲ್ಲ ಎಂದರು.
ಗ್ರಾಮದಲ್ಲಿ ಜನ ಗುಂಪು ಗುಂಪಾಗಿ ಸೇರದೆ ಅಂತರ ಕಾಪಾಡಿಕೊಳ್ಳಬೇಕು. ಹೋಟೆಲ್ ಹಾಗೂ ಅಂಗಡಿಗಳ ಮುಂದೆ ಜನ ಸೇರಿದರೆ ಗ್ರಾಮ ಪಂಚಾಯಿತಿಯಿಂದ ಮಾಲೀಕರಿಗೆ ದಂಡ ವಿಧಿಸಲಾಗುವುದು. ಮಾಸ್ಕ್ ಹಾಕದವರಿಗೆ ₹100 ದಂಡ ವಿಧಿಸಲು ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.
ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಧ್ವನಿವರ್ಧಕದ ಮೂಲಕ ಅರಿವು ಮೂಡಿಸಲಾಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸೇರಿ ಗ್ರಾ.ಪಂ ಸದಸ್ಯರು ಇದ್ದರು.