ಕನಕಗಿರಿ: ಸಮೀಪದ ಚಿಕ್ಕಮಾದಿನಾಳ ಗ್ರಾಮದ ಕೋವಿಡ್ ಆರೈಕೆ ಕೇಂದ್ರಕ್ಕೆ ಅಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ತಮ್ಮ ಒಂದು ತಿಂಗಳ ಗೌರವ ಧನದ ಚೆಕ್ ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಶುಕ್ರವಾರ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಶ ಪೂಜಾರ ಮಾತನಾಡಿ,‘ಕೊರೊನಾ ಸಂಕಷ್ಟದ ಸಮಯದಲ್ಲಿ ಗ್ರಾ.ಪಂ. ಆಡಳಿತ ಮಂಡಳಿಯವರು ತೋರಿದ ಮಾನವೀಯತೆ ಅನುಕರಣೀಯ. ಗ್ರಾಮದಲ್ಲಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿರುವ ಸೋಂಕಿತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಒಂದು ತಿಂಗಳ ಗೌರವ ಧನ ಒಟ್ಟು ₹23 ಸಾವಿರ ಚೆಕ್ ನೀಡಿದ್ದು ಶ್ಲಾಘನೀಯ’ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಪ್ಪಣ್ಣ ಗಿಡ್ಡಿ ಮಾತನಾಡಿ,‘ಕೊರೊನಾ ಸೋಂಕಿತರನ್ನು ಆರೈಕೆ ಕೇಂದ್ರದ ಕಡೆಗೆ ಸೆಳೆಯಲು ತಾವು ಒಬ್ಬರಿಗೆ ಎರಡು ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಣೆ ಮಾಡಿದ್ದು, ಚಿಕಿತ್ಸೆ ಪಡೆದು ಮನೆಗೆ ತೆರಳಿದವರಿಗೆ ನಗದು ಹಣ ನೀಡಲಾಗಿದೆ’ ಎಂದರು.
ಸೋಂಕಿತರಿಗೆ ಉತ್ತಮ ಗುಣಮಟ್ಟದ ಊಟ, ಇತರೆ ವ್ಯವಸ್ಥೆ ಕಲ್ಪಿಸಲು ಎಲ್ಲ ಸದಸ್ಯರು ಸೇರಿ ಗೌರವ ಧನದ ಚೆಕ್ ನೀಡಲಾಗಿದೆ ಎಂದರು.
ಉಪಾಧ್ಯಕ್ಷೆ ಹುಲಿಗೆಮ್ಮ ಸುಳೇಕಲ್ ಹಾಗೂ ಗ್ರಾ.ಪಂ. ಸದಸ್ಯರು ಇದ್ದರು.