ಹನುಮಸಾಗರ: ‘ಜಾತ್ರೆ, ಮದುವೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಜನ ಸೇರುತ್ತಿರುವ ಕಾರಣ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಜನ ಸಹಕರಿಸಬೇಕು’ ಎಂದು ತಹಶೀಲ್ದಾರ್ ಸಿದ್ದೇಶ.ಎಂ ಮನವಿ ಮಾಡಿದರು.
ಕೊರೊನಾ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
‘ಸರ್ಕಾರದ ಮಾರ್ಗಸೂಚಿ, ಕೋವಿಡ್ ಲಕ್ಷಣ ಹಾಗೂ ಚಿಕಿತ್ಸೆಯ ಕುರಿತು ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶ. ಎಲ್ಲರೂ ಮಾರ್ಗಸೂಚಿ ಪಾಲಿಸಬೇಕು’ ಎಂದರು.
ಕಂದಾಯ ನಿರೀಕ್ಷಕ ಉಮೇಶಗೌಡ ಮಾತನಾಡಿ,‘ಜ್ವರ, ನೆಗಡಿ, ಕೆಮ್ಮು ಮತ್ತು ಉಸಿರಾಟದ ತೊಂದರೆ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಹಾಗೂ ಅಧಿಕ ರಕ್ತದೊತ್ತಡ ಇರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಯಿತು.
ಅಗತ್ಯ ವಸ್ತು ಮಾರಾಟ ಅಂಗಡಿಗಳನ್ನು ಹೊರತುಪಡಿಸಿ ಉಳಿದವುಗಳನ್ನು ಬಂದ್ ಮಾಡಿಸಲಾಯಿತು.
ಕಂದಾಯ ನಿರೀಕ್ಷಕ ಉಮೇಶಗೌಡ, ಸಹಾಯಕ ಸಬ್ ಇನ್ಸ್ಪೆಕ್ಟರ್ ರಾಮನಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಮೂಲಿಮನಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಅಭಿಷೇಕ ಇದ್ದರು.