ಹನುಮಸಾಗರ: ‘ಬೇರೆ ಕಡೆಯಿಂದ ಗ್ರಾಮಕ್ಕೆ ಬಂದಿರುವವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ, ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಸಲಹೆ ನೀಡಿದರು.
ಸಮೀಪದ ಹಾಬಲಕಟ್ಟಿ, ಜಹಗೀರಗುಡದೂರು, ಹನುಮನಾಳ, ಪರಮನಹಟ್ಟಿ ಹಾಗೂ ಗೊಣ್ಣಾಗರ ಗ್ರಾಮಗಳಿಗೆ ಭೇಟಿ ನೀಡಿ ಕೋವಿಡ್ ಜಾಗೃತಿ ಮೂಡಿಸಿದರು.
ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಅದರ ನಿಯಂತ್ರಣಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ. ನಾವು ಸುರಕ್ಷಿತವಾಗಿದ್ದರೆ ಮಾತ್ರ ಇತರರ ಆರೋಗ್ಯ ಕಾಪಾಡಲು ಸಾಧ್ಯ. ಲಸಿಕೆ ಹಾಕಿಸಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯರು ತಮ್ಮ ವಾರ್ಡ್ಗಳಲ್ಲಿ ಜನರಿಗೆ ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವೇಂದ್ರ ಕಮತರ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಇದ್ದರು.