ಕೊಪ್ಪಳ: ಕೇಂದ್ರ ಸರ್ಕಾರದ ಆಡಳಿ ವೈಫಲ್ಯ ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿಯಿಂದ ಮಂಗಳವಾರ ನಗರದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುಂಕಪ್ಪ ಗದಗ ಮಾತನಾಡಿ, ಕೊರೊನಾ ವೈರಸ್ ತಡೆಯುವಲ್ಲಿ ಪ್ರಧಾನಿ ಮೋದಿಯವರ ಸಾಧನೆಗೆ ವಿಶ್ವ ಮಾನ್ಯತೆ ದೊರೆತಿದೆ ಎಂದು ಮಾಧ್ಯಮಗಳ ಮೂಲಕ ಹಾಡಿ ಹೊಗಳಲಾಗುತ್ತಿದೆ. ಆದರೆ ಭಾರತದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಪ್ರತಿದಿನವೂ ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ಸುಮಾರು 3 ಲಕ್ಷಕ್ಕೆ ಸಮೀಪಿಸುತ್ತಿದೆ. ಅವರ ಪೈಕಿ ಈಗಾಗಲೆ ಸುಮಾರು 10 ಸಾವಿರ ಸೋಂಕಿತರು ಸರಿಯಾದ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವುದು ಮೋದಿ ಸರ್ಕಾರದ ಸಾಧನೆಯಾಗಿದೆ.
ಯಾವುದೇ ಮುನ್ಸೂಚನೆ ಇಲ್ಲದೆ ಲಾಕ್ಡೌನ್ ಮಾಡಿದ್ದರಿಂದಾಗಿ ಹೊಟ್ಟೆಪಾಡಿಗಾಗಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಬಂದು ದುಡಿಯುತ್ತಿದ್ದ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಂಡು ಯಾವುದೇ ಆದಾಯವಿಲ್ಲದೆ ಬೀದಿಪಾಲಾಗಿದ್ದಾರೆ.ದೇಶದಲ್ಲಿ ಈವರೆಗೆ ಸುಮಾರು 1,000 ವಲಸೆ ಕಾರ್ಮಿಕರು ದಾರಿಯಲ್ಲಿ ಮೃತರಾಗಿದ್ದಾರೆ. ರೈತರು ಸಾಲಗಾರರಾಗಿದ್ದಾರೆ. ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದರು.
ಆದಾಯ ತೆರಿಗೆ ತೆರುವ ಮಿತಿಗಳ ಹೊರಗಿರುವ ಎಲ್ಲ ಕುಟುಂಬಗಳಿಗೆ ತಿಂಗಳಿಗೆ ₹ 7,500 ದಂತೆ ಆರು ತಿಂಗಳುವರೆಗೆ ನಗದು ವರ್ಗಾವಣೆ ಮಾಡಬೇಕು.ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆ.ಜಿ ಉಚಿತ ಆಹಾರ ಧಾನ್ಯಗಳನ್ನು ವಿತರಣೆ ಮಾಡಬೇಕು.ಉದ್ಯೋಗ ಖಾತ್ರಿ ಅಡಿಯಲ್ಲಿ 200 ದಿನಗಳ ಉದ್ಯೋಗ ನೀಡಬೇಕು. ನಗರದ ಬಡವರಿಗೂ ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಬೇಕು. ನಿರುದ್ಯೋಗಿಗಳಿಗೆ ತಕ್ಷಣವೇ ನಿರುದ್ಯೋಗ ಭತ್ಯೆ ಪ್ರಕಟಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.