ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ: ಪ್ರಾಣಿ ಬಲಿ ತಡೆಯಲು ದಯಾನಂದ ಸ್ವಾಮೀಜಿ ಆಗ್ರಹ

Published 29 ಮೇ 2024, 14:40 IST
Last Updated 29 ಮೇ 2024, 14:40 IST
ಅಕ್ಷರ ಗಾತ್ರ

ಕೊಪ್ಪಳ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ತಾಣ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ವೇಳೆ ಪ್ರಾಣಿಬಲಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದರ ಬಗ್ಗೆ ನಿಗಾ ವಹಿಸಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಆಗ್ರಹಿಸಿದರು.

‘ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನ ಇದಾಗಿದ್ದು ರಾಜ್ಯವಷ್ಟೇ ಅಲ್ಲದೆ ಮಹಾರಾಷ್ಟ್ರ, ಗೋವಾ, ಆಂಧ್ರ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಿಂದ ಭಕ್ತರು ಬರುತ್ತಾರೆ. ಆಡು, ಕುರಿ, ಕೋಳಿ ಸೇರಿದಂರೆ ಹಲವು ಪ್ರಾಣಿಗಳನ್ನು ಬಲಿ ನೀಡುವುದು ಪರಂಪರೆ ಮಾಡಿಕೊಂಡು ಬಂದಿದ್ದು, ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಪ್ರಾಣಿಗಳ ಬಲಿ ಶಿಕ್ಷಾರ್ಹ ಅಪರಾಧವಾಗಿದ್ದು, ನ್ಯಾಯಾಲಯವೂ ಇದರ ಬಗ್ಗೆ ತೀರ್ಪು ನೀಡಿದೆ. ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕರಪತ್ರ ಹಂಚಬೇಕು, ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಬೇಕು, ಪ್ರಾಣಿ ಬಲಿ ತಡೆ ಕುರಿತು ಜಾಗೃತಿ ಮೂಡಿಸಲು ವಿವಿಧ ಪ್ರಾಣಿ, ಪರಿಷರ ಮತ್ತು ಧಾರ್ಮಿಕ ಸಂಘಟನೆಗಳನ್ನು ಬಳಸಿಕೊಳ್ಳಬೇಕು. ಜಾತ್ರೆಯ ಸಂದರ್ಭದಲ್ಲಿ ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳ ತಂಡ ರಚಿಸಿ ಕಣ್ಗಾವಲು ವಹಿಸಬೇಕು’ ಎಂದು ಮನವಿ ಮಾಡಿದರು.

‘ಹುಲಿಗೆಗೆ ಜಾತ್ರ ಮಾತ್ರವಲ್ಲದೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಲಕ್ಷಾಂತರ ಭಕ್ತರು ಬರುತ್ತಾರೆ. ಜಾತ್ರೆಯ ಸಮಯದಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಜಾಸ್ತಿಯಿರುತ್ತದೆ. ಆದ್ದರಿಂದ ಜಿಲ್ಲಾಡಳಿತ ಪ್ರಾಣಿ ಬಲಿ ಬಗ್ಗೆ ಎಚ್ಚರಿಕೆ ವಹಿಸಬೇಕು’ ಎಂದರು.        

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT