ಕುಷ್ಟಗಿ: ದೈಹಿಕವಾಗಿ ಅಂಗವೈಕಲ್ಯಕ್ಕೆ ಒಳಗಾಗಿದ್ದರೂ ಅನೇಕ ಅಂಗವಿಕಲ ವ್ಯಕ್ತಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತ ಬಂದಿದ್ದಾರೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಸತೀಶ್ ಹೇಳಿದರು.
ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಅಂಗವಿಕಲರ ದಿನಾಚರಣೆ ನಿಮಿತ್ತ ಏರ್ಪಡಿಸಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಂಗವಿಕಲರಿಗೆ ಕಾನೂನಿನ ನೆರವು ದೊರೆಯತ್ತದೆ. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಬದುಕಿನಲ್ಲಿ ಸ್ವಾವಲಂಬಿಗಳಾಗಬೇಕು’ ಎಂದರು.
ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ್ರ ಮಾತನಾಡಿ, ಅಂಗವಿಕಲರಿಗೆ ದೈಹಿಕ ನೂನ್ಯತೆಗಳ ಆಧಾರದ ಮೇಲೆ ಸರ್ಕಾರದಿಂದ ಮಾಸಾಶನ ದೊರೆಯುತ್ತದೆ. ಅಂಥ ಸೌಲಭ್ಯದಿಂದ ಯಾರೂ ವಂಚಿತರಾಗದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ನಂತರ ಅಂಗವಿಕಲರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ಹಾಗೂ ಕುಂದು ಕೊರತೆಗಳ ಕುರಿತು ಚರ್ಚಿಸಲಾಯಿತು.
ಅಂಗವಿಕಲರಾಗಿದ್ದು ಸ್ವಾವಲಂಬಿ ಜೀವನ ನಡೆಸುತ್ತಿರುವ ತಾಲ್ಲೂಕಿನ ಯಮನಮ್ಮ ಕಿಳ್ಳಿಕ್ಯಾತರ, ಶರಣಪ್ಪ ವಡ್ಡರ, ಭಾಷಾವಲಿ, ವಿಶ್ವನಾಥ ಬಡಿಗೇರ ಅವರನ್ನು ಸನ್ಮಾನಿಸಲಾಯಿತು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ವಿಜಯಮಹಾಂತೇಶ ಕುಷ್ಟಗಿ, ಸರ್ಕಾರಿ ವಕೀಲ ಎಲ್.ರಾಯನಗೌಡ, ಗ್ರೇಡ್ 2 ತಹಶೀಲ್ದಾರ ಮುರಳೀಧರ ಮುಕ್ತೆದಾರ, ಚಂದ್ರಶೇಖರ ಹಿರೇಮನಿ, ತಾಲ್ಲೂಕಿನ ವಿವಿಧ ಗ್ರಾಮಗಳ ಅಂಗವಿಕಲರು ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿ ಪಾಲ್ಗೊಂಡಿದ್ದರು.