ಸಂಘಗಳಿಂದ ಆರ್ಥಿಕ ಸದೃಢತೆ

ಯಲಬುರ್ಗಾ: ‘ಸ್ವಸಹಾಯ ಸಂಘಗಳಿಂದ ಆರ್ಥಿಕ ಸದೃಢತೆ ಸಾಧ್ಯ’ ಎಂದು ಜನಜಾಗೃತಿ ವೇದಿಕೆ ಅಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅಭಿಪ್ರಾಯಪಟ್ಟರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ತಾಲ್ಲೂಕು ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನ ಹಾಗೂ ಸಂಘಗಳ ಲಾಭಾಂಶ ಹಂಚಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋದರೆ ಸಂಘದ ಪ್ರತಿಯೊಬ್ಬರೂ ಆರ್ಥಿಕವಾಗಿ ಸದೃಢರಾಗಬಹುದು. ಸಂಘ ಅಥವಾ ಸಂಸ್ಥೆಗಳು ಅಭಿವೃದ್ಧಿಯಾಗಬೇಕಾದರೆ ಸಾಲ ಮರುಪಾವತಿ ಮುಖ್ಯ. ಸಾಲ ಅಭಿವೃದ್ಧಿಗೆ ಕಾರಣವಾದರೆ ಸಂಘಗಳು ಕೂಡ ಬೆಳೆಯುತ್ತವೆ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಮಾತನಾಡಿ,‘ಮಾದಕ ವಸ್ತು ಪಿಡುಗು ನಿರ್ಮೂಲನೆಗೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಪಾಲಕರು ಈ ಕುರಿತು ಕಾಳಜಿ ವಹಿಸಬೇಕು’ ಎಂದು ಹೇಳಿದರು.
ಸಂಸ್ಥೆಯ ಯೋಜನಾಧಿಕಾರಿ ಸುಧಾ.ಪಿ ಮಾತನಾಡಿ,‘ಯುವಕರು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯದ ಕಡೆ ಗಮನ ಕೊಡುವುದು ಅವಶ್ಯಕ. ಯುವಕರು ಆರೋಗ್ಯವಾಗಿದ್ದರೆ ದೇಶ ಸದೃಢವಾಗಿರುತ್ತದೆ’ ಎಂದು ಅವರು ಹೇಳಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶಾಂತ ಮಾಟೂರ, ಸದಸ್ಯೆ ಕಲಾವತಿ ಹಾಗೂ ಸದಸ್ಯ ಕಳಕಪ್ಪ ತಳವಾರ ಇದ್ದರು.
ವಲಯ ಮೇಲ್ವಿಚಾರಕಿ ತ್ರಿವೇಣಿ ಬಾವಿಕಟ್ಟಿ ಸ್ವಾಗತಿಸಿ, ನಿರೂಪಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.