ಕೊಪ್ಪಳ: ‘ಸಾಮಾನ್ಯವಾಗಿ ಮಾದಕ ಪದಾರ್ಥಗಳ ಸೇವನೆಯು ಹತ್ತಿರದ ಸ್ನೇಹಿತರ ಪ್ರಲೋಭನೆಗೆ ಒಳಗಾಗಿ ಆರಂಭವಾಗಿ ನಂತರ ಚಟವಾಗಿ ಪರಿಣಮಿಸುತ್ತದೆ. ಮಾದಕ ಪದಾರ್ಥಗಳ ಸೇವನೆಯಿಂದ ಅಲ್ಪಾವಧಿ ಮತ್ತು ದೀರ್ಘಾವಧಿ ಗಂಭೀರ ತೀವ್ರತರವಾದ ಆರೋಗ್ಯ ಮತ್ತು ಮಾನಸಿಕ ಸಮಸ್ಯೆಗಳು ಎದುರಾಗುತ್ತವೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಚಂದ್ರಶೇಖರ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬಾಲ ನ್ಯಾಯ ಮಂಡಳಿ ಸಹಯೋಗದಲ್ಲಿ ಮಾದಕ ದ್ರವ್ಯ, ವಸ್ತುಗಳ ದುಷ್ಪರಿಣಾಮಗಳ ಕುರಿತು ಗವಿಸಿದ್ದೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಜೀವನವನ್ನು ಆಯ್ದುಕೊಳ್ಳಿ, ಮಾದಕ ಪದಾರ್ಥಗಳನ್ನು ಅಲ್ಲ ಎಂಬುದನ್ನು ಅರಿಯಬೇಕು. ದೇಶದ ಜವಾಬ್ದಾರಿಯುತ ಪ್ರಜೆಗಳಾದ ನಾವುಗಳು ಮಾದಕ ದ್ರವ್ಯ, ವಸ್ತುಗಳ ದುಷ್ಪರಿಣಾಮಗಳ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸಹಕರಿಸಬೇಕು’ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ ಅವರು ಮಾತನಾಡಿ ‘ಕೋಟ್ಪಾ ಕಾಯ್ದೆಯನ್ವಯ ಶೈಕ್ಷಣಿಕ ಸಂಸ್ಥೆಗಳ 100 ವ್ಯಾಸದೊಳಗಿನ ಪ್ರದೇಶದಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನವನ್ನು ಮಾರಾಟ ಮಾಡುವಂತಿಲ್ಲ. ಈ ಕಾಯ್ದೆಗಳ ಮುಖ್ಯ ಉದ್ದೇಶ ಮಕ್ಕಳು ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸುವುದನ್ನು ನಿಷೇಧಿಸುವಂತೆ ಮಾಡುವುದು’ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಶಿರಸಂಗಿ, ಸಂಪನ್ಮೂಲ ವ್ಯಕ್ತಿಯಾಗಿದ್ದ ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಆಂಜನೇಯ ಡಿ.ಎಸ್., ಸೈಬರ್ ಠಾಣೆಯ ನಿರೀಕ್ಷಕ ಅಮರೇಶ ಹುಬ್ಬಳ್ಳಿ, ಗವಿಸಿದ್ದೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ವೀರೇಶಕುಮಾರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಉಪಾಧ್ಯಕ್ಷ ದಿವಾಕರ್ ಜಿ ಬಾಗಲಕೋಟೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.