ಗಂಗಾವತಿ: ‘ರೈತರ ಅಭಿವೃದ್ಧಿಗಾಗಿ ಕೃಷಿ ಇಲಾಖೆ ಮೂಲಕ ವಿವಿಧ ಯೋಜನೆಗಳನ್ನು ಜಾರಿ ಮಾಡಲಾಗಿದೆ. ರೈತರು ಅದರ ಲಾಭ ಪಡೆದುಕೊಳ್ಳಬೇಕು’ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ನಗರದ ನೀಲಕಂಠೇಶ್ವರ ಸರ್ಕಲ್ನಲ್ಲಿರುವ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಮಗ್ರ ಕೃಷಿ ಅಭಿಯಾನದ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಕೃಷಿ ಇಲಾಖೆ ವತಿಯಿಂದ ಸಹಾಯಧನದಲ್ಲಿ ಕೃಷಿ ಪರಿಕರಗಳ ವಿತರಣೆ, ಕೃಷಿ ಸಂಸ್ಕರಣೆ, ಕೃಷಿ ಯಂತ್ರಧಾರೆ, ಕೃಷಿ ಯಂತ್ರೋಪಕರಣಗಳ ಬಾಡಿಗೆ, ಪಿಎಂ ಕಿಸಾನ್, ಫಸಲ್ ಬಿಮಾ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬ ರೈತರು ಕೂಡ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಯೋಜನೆಗಳ ಲಾಭ ಪಡೆದುಕೊಳ್ಳಬೇಕು. ರೈತರ ಮನೆ ಬಾಗಿಲಿಗೆ ಯೋಜನೆಗಳನ್ನು ಮುಟ್ಟಿಸಲು ಕೃಷಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರೈತರ ಮನೆ ಬಾಗಿಲಿಗೆ ಬರುವ ರಥ ಯೋಜನೆಗಳ ಮಾಹಿತಿ ನೀಡಲಿದೆ ಎಂದು ಹೇಳಿದರು.
ನಂತರ ಕೃಷಿ ಜಾಗೃತಿ ಅಭಿಯಾನದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ತುಂಗಭದ್ರಾ ಕಾಡ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ರೈತ ಮುಖಂಡ ಶರಣೇಗೌಡ ಕೇಸರಹಟ್ಟಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್, ಕೃಷಿ ಅಧಿಕಾರಿಗಳಾದ ಪ್ರಕಾಶ್, ಆರ್.ಎಚ್.ಭಗವಾನ್, ಕೆ.ದೀಪಾ, ನವೀನ್ ಹಾಗೂ ಇತರರು ಇದ್ದರು.