ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ 6 ಮರಗಳನ್ನು ಅನುಮತಿ ಪಡೆಯದೇ ಕಡಿಯಲಾಗಿದ್ದು, ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಗುರುವಾರ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಐದು ಕೊಠಡಿ ನಿರ್ಮಾಣಕ್ಕೆ ₹ 80 ಲಕ್ಷ ಅನುದಾನ ಮಂಜೂರಾಗಿದೆ. ಲೋಕೋಪಯೋಗಿ ಇಲಾಖೆಗೆ ಕಟ್ಟಡ ಕಾಮಗಾರಿಯ ಹೊಣೆ ವಹಿಸಲಾಗಿದೆ.
ಶಾಲಾ ಕಟ್ಟಡ ನಿರ್ಮಾಣಕ್ಕೆ ನಿಗದಿಪಡಿಸಿದ್ದ ಸ್ಥಳದಲ್ಲಿದ್ದ ನೀಲಗಿರಿ, ಅಶೋಕ ಗಿಡಗಳನ್ನು ಕಡಿಯಲಾಗಿದೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.
‘ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಆವರಣದಲ್ಲಿದ್ದ ಮರಗಳನ್ನು ಕಡಿಯಲು ಅನುಮತಿ ನೀಡುವಂತೆ ಅರಣ್ಯ ಇಲಾಖೆಗೆ ಬಿಇಒ ಅವರು ಪತ್ರ ಬರೆದು ಮನವಿ ಮಾಡಿದ್ದರು. ಅರಣ್ಯ ಇಲಾಖೆಯ ಅನುಮತಿ ಸಿಗುವುದು ತಡವಾಗಿದ್ದರಿಂದ ಮರಗಳನ್ನು ಕಡಿಯಲಾಗಿದೆ’ ಎಂದು ಶಾಲೆಯ ಮುಖ್ಯ ಶಿಕ್ಷಕ ಎಚ್ ಕುರಿ ತಿಳಿಸಿದ್ದಾರೆ.