ಚಿಕ್ಕಮ್ಯಾಗೇರಿ (ಯಲಬುರ್ಗಾ): ‘ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ಶಾಲೆಯ ಮುಖ್ಯಸ್ಥರು ಪಂಚಾಯಿತಿಯನ್ನು ಸಂಪರ್ಕಿಸಬಹುದಾಗಿದೆ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚನ್ನಬಸವನಗೌಡ ಮಾಲಿಪಾಟೀಲ ಹೇಳಿದರು.
ಚಿಕ್ಕಮ್ಯಾಗೇರಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮೈದಾನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹಲವು ಕಾಮಗಾರಿ ಕೈಗೊಳ್ಳಲು ಅವಕಾಶಗಳಿವೆ ಎಂದರು.
ಶಾಲೆಯಲ್ಲಿ ಸುಮಾರು ₹15 ಲಕ್ಷ ವೆಚ್ಚದಲ್ಲಿ ಮಳೆ ನೀರು ಸಂಗ್ರಹ ಘಟಕ, ಅಡುಗೆ ಕೊಠಡಿ, ಶೌಚಾಲಯ, ಕಾಂಪೌಂಡ್, ಪೌಷ್ಟಿಕ ತೋಟ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಮೂಲಕ ಶಾಲೆಗಳ ಸಮಗ್ರ ಅಭಿವೃದ್ಧಿಗೊಳಿಸಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಂಚವ್ವ ಹಿರೇಮನಿ ಭೂಮಿ ಪೂಜೆ ನೆರವೇರಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಯಮನೂರಪ್ಪ ನದಾಫ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶರಣಪ್ಪ ಕುರಿ, ಸದಸ್ಯ ಹುಚ್ಚಮ್ಮ ಉಪ್ಪಾರ, ಶಾಂತಮ್ಮ ಮುರಾರಿ, ಗಂಗಮ್ಮ ಕುಕನಪಳ್ಳಿ, ಫಾತೀಮಾಬೇಗಂ, ಶರಣಪ್ಪ ಕರಡದ, ದೇವಪ್ಪ ಲಗಳೂರ, ಸವಿತಾ ಮನೆಹಿಂದಿನ ಹಾಗೂ ಕಾರ್ಯದರ್ಶಿ ಶಿವರಾಜ ಪಾಟೀಲ ಇದ್ದರು.