ಕುಷ್ಟಗಿ: ವಿರೋಧ ಪಕ್ಷದ ಸ್ಥಾನಮಾನವನ್ನು ಲೆಕ್ಕಿಸದೆ ದೇಶದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುತ್ತಿರುವುದು ಅವರ ಬೇಜವಾಬ್ದಾರಿ ವರ್ತನೆಯ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ತೆರಳುವ ಮಾರ್ಗ ಮಧ್ಯೆ ಪಟ್ಟಣಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಒಬ್ಬ ರಾಜಕೀಯ ನಾಯಕನಿಗೆ ಇಂಥ ಹೇಳಿಕೆಗಳು ಶೋಭೆ ತರುತ್ತವೆ ಎಂದು ಭಾವಿಸಿದರೆ ಅದು ತಪ್ಪು ಎನಿಸುತ್ತದೆ. ಇದರಿಂದ ಅವರಿಗೆ ಯಾವುದೇ ಲಾಭವೂ ಆಗುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಕರ್ನಾಟಕ ಸೇರಿದಂತೆ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿದ್ದು, ಅದು ಮುಳುಗುತ್ತಿರುವ ಹಡಗು. ಹಾಗಾಗಿ ಆ ಪಕ್ಷದ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ಏನೇ ಹೇಳಿದರೂ ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ. ಬದಲಾಗಿ ಉಪ ಚುನಾವಣೆ ಫಲಿತಾಂಶದಿಂದಲೇ ಅವರಿಗೆ ತಕ್ಕ ಉತ್ತರ ದೊರೆಯಲಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿನ ಸರ್ಕಾರ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯಡಿಯೂರಪ್ಪ, ನೀರಾವರಿ ಮತ್ತಿತರೆ ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಂಡಿವೆ. ಕೋವಿಡ್ ಸಂಕಷ್ಟದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಅನುಕೂಲಕರ ಇಲ್ಲದಿದ್ದರೂ ಬಡವರಿಗೆ ನೀಡುವ ಮಾಸಾಶನ ಮೊತ್ತ ಹೆಚ್ಚಿಸಲಾಗಿದೆ. ಕೋವಿಡ್ದಿಂದ ಮೃತಪಟ್ಟವರ ವಾರಸುದಾರರಿಗೆ ಪರಿಹಾರ ನೀಡಲಾಗುತ್ತಿದೆ. ಸರ್ಕಾರದ ಕಾರ್ಯವೈಖರಿ ಕಾಂಗ್ರೆಸ್ಸಿಗರಿಗೆ ಅರಗಿಸಿಕೊಳ್ಳದಂತಾಗಿದೆ. ರಾಜ್ಯದ ಜನತೆ ಇದನ್ನು ಗಮನಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕ ಕೆ.ಶರಣಪ್ಪ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಹಳ್ಳೂರು, ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಮಹೇಶ್ ಇದ್ದರು.