ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳದ ಗವಿಮಠದಿಂದ 5000 ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್‌ಗೆ ಭೂಮಿಪೂಜೆ

ಎಲ್ಲ ಸಮಸ್ಯೆಗೆ ಶಿಕ್ಷಣವೇ ಶಾಶ್ವತ ಪರಿಹಾರ: ಸಚಿವ ಸಿಂಗ್
Last Updated 23 ಜೂನ್ 2022, 7:37 IST
ಅಕ್ಷರ ಗಾತ್ರ

ಕೊಪ್ಪಳ: ದಾನ ಮಾಡುವುದರಿಂದ ತಾತ್ಕಾಲಿಕವಾಗಿ ಸಮಸ್ಯೆ ಪರಿಹಾರವಾಗಬಹುದು. ಶಿಕ್ಷಣ ನೀಡುವುದರಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಗವಿಮಠದ ಆವರಣದಲ್ಲಿ ಗುರುವಾರ 5 ಸಾವಿರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಮೊದಲ ಆದ್ಯತೆ ಶಿಕ್ಷಣಕ್ಕೆ ನೀಡಬೇಕು. ಮಠ, ಸಂಘಟನೆಗಳು ಶಿಕ್ಷಣಕ್ಕೆ ಒತ್ತು ನೀಡಬೇಕು. ಶಿಕ್ಷಣದಿಂದ ಮಾತ್ರ ಬಡತನ ನಿರ್ಮೂಲನೆ ಆಗಲಿದೆ ಎಂದರು.

ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಗವಿಮಠದಲ್ಲಿ ಬೆಳೆದು ವಿದ್ಯಾಭ್ಯಾಸ ಮಾಡಿ ಮಠದ ಪೀಠಾಧಿಪತಿಯಾಗಿದ್ದಾರೆ. ತಾವು ಅನುಭವಿಸಿದ ಕಷ್ಟಗಳು ವಿದ್ಯಾರ್ಥಿಗಳಿಗೆ ಆಗಬಾರದು ಎಂದು ಸಂಕಲ್ಪ ಮಾಡಿದ್ದಾರೆ. ವಿದ್ಯಾರ್ಥಿ ನಿಲಯ ಕಟ್ಟಲು ಶ್ರೀಗಳ ಜೋಳಿಗೆಗೆ ಶಕ್ತಿ ತುಂಬುತ್ತೇನೆ ಎಂದರು.

ಯಾವುದೇ ರಾಜಕೀಯ ‌ಪಕ್ಷಗಳು ಅಧಿಕಾರಕ್ಕೆ ಬಂದರೂ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಇದರಲ್ಲಿ ದೇಶದ ಭವಿಷ್ಯವೂ ಇದೆ ಎಂದರು.

ಕಣ್ಣೀರಾದ ಸ್ವಾಮೀಜಿ

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಮರಿಶಾಂತವೀರ ಸ್ವಾಮೀಜಿ 16 ವರ್ಷ ಕಾಶಿಯಲ್ಲಿ ಆಯುರ್ವೇದ, ಸಂಸ್ಕೃತ ಹಾಗೂ ಯೋಗ ವಿದ್ಯಾಭ್ಯಾಸ ಮಾಡಿ ಕೊಪ್ಪಳಕ್ಕೆ ಮರಳಿದರು. ಶ್ರೀಗಳು ಊರೂರು ತಿರುಗಿ ಭಿಕ್ಷೆ ಭೇಡಿ ಮಕ್ಕಳಿಗೆ ಶಿಕ್ಷಣ ನೀಡಿದರು. ಆಗ ಇನ್ನು ಪ್ರಸಾದ ನಿಲಯ ಆರಂಭಿಸಿರಲಿಲ್ಲ. ಮಠಕ್ಕೆ ಬಂದ ಭಕ್ತರು ಮೀಸಲು ತುಪ್ಪದ ದೀಪ ಹಚ್ಚಿದರೆ ಮಕ್ಕಳು ಅದನ್ನು ತಿನ್ನುತ್ತಿದ್ದರು. ಭಕ್ತರು ಅಕ್ರೋಶಗೊಂಡು ಅಂತಹ ಮಕ್ಕಳನ್ನು ಮಠದಿಂದ ಹೊರ ಕಳುಹಿಸಲು ತಿಳಿಸಿದ್ದರು. ಆಗ ಶ್ರೀಗಳು ನೀವು ನಂದಿ ಹೋಗುವ ದೀಪಕ್ಕೆ ಮೀಸಲು ತುಪ್ಪ ಹಾಕಿದ್ದೀರಿ. ನೀವು ಹಾಕಿದ ತುಪ್ಪ ತಿಂದು ಮಕ್ಕಳು ಅರಳುತ್ತವೆ ಎಂದು ತಿಳಿಸಿ ತಕ್ಷಣವೇ ಪ್ರಸಾದ ನಿಲಯ ಆರಂಭಿಸಿದರು ಎಂದು ಭಾವನಾತ್ಮಕವಾಗಿ ನುಡಿದರು.

ಗವಿಮಠದಲ್ಲಿ 2002-03ರಲ್ಲಿ 160 ಮಾತ್ರ ಮಕ್ಕಳಿದ್ದರು. ಈಗ ಅವರ ಸಂಖ್ಯೆ 3500ಕ್ಕೆ ಏರಿಕೆಯಾಗಿದೆ. ನಮ್ಮಲ್ಲಿ 2,000 ಮಕ್ಕಳಿಗೆ ಉಚಿತ ವಸತಿ ಹಾಗೂ ಪ್ರಸಾದ ನಿಲಯವಿದೆ. ಉಳಿದವರಿಗೆ ಮಠದ ವಿವಿಧ ಹಾಲ್ ಗಳು ಹಾಗೂ ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ 5,000 ಮಕ್ಕಳ ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ ಎಂದರು.

ಜೋಳಿಗೆ ತುಂಬಲು ಭಗವಂತ ಶಕ್ತಿ ನೀಡಲಿ: ನಾನು ಬಡತನದಿಂದ ಬಂದಿದ್ದೇನೆ. ಗವಿಮಠ ಅನ್ನ, ಊಟ ಹಾಗೂ ಪುಸ್ತಕ ಕೊಟ್ಟು ಓದಿಸಿದೆ. ಮಕ್ಕಳು ವಿದ್ಯಾವಂತರಾಗಬೇಕು ಎಂಬ ಉದ್ದೇಶ ಮಠದ ಸಂಕಲ್ಪವಾಗಿದೆ. ಎಷ್ಟು ಶಕ್ತಿ ಇದೆ ಅಷ್ಟೂ ಮಕ್ಕಳನ್ನು ಓದಿಗೆ ನೆರವಾಗುತ್ತೇನೆ. ಗವಿಸಿದ್ಧ ನನ್ನ ಜೋಳಿಗೆಗೆ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಭಾವುಕರಾದರು.

ವಿಶೇಷ ಅನುದಾನಕ್ಕೆ ಸಿಎಂಗೆ ಮನವಿ:ಗವಿಮಠ ಕೊಪ್ಪಳಕ್ಕೆ ಆಸ್ತಿಯಾಗಿದೆ. ಮಕ್ಕಳ ವಿದ್ಯಾಭಾಸದ ದೃಷ್ಟಿಯಿಂದ
ಪಕ್ಷಾತೀತವಾಗಿ ಕೊಪ್ಪಳ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ನಿಯೋಗ ಸಿಎಂ ಬಳಿ ತೆರಳಿ ಮಠಕ್ಕೆ ವಿಶೇಷ ಅನುದಾನ ನೀಡಲು ಮನವಿ ಮಾಡಲಾಗುವುದು. ಸಚಿವ ಹಾಲಪ್ಪ ಆಚಾರ್ ಅವರ ನೇತೃತ್ವದಲ್ಲಿ ನಿಯೋಗ ಶೀಘ್ರವೇ ಹೋಗಲಾಗುವುದು ಎಂದು ಆನಂದ್ ಸಿಂಗ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT