ಕೊಪ್ಪಳ: ‘ಮಳೆ ಕೊರತೆ ಎದುರಾದರೆ ಕುಡಿಯುವ ನೀರು ಪೂರೈಸಲು ಹೇಗೆಲ್ಲ ಸಾಧ್ಯವಿದೆ ಎಂಬುದರ ಬಗ್ಗೆ ಕ್ರೀಯಾಯೋಜನೆ ರೂಪಿಸಿ ಜಿ.ಪಂಗೆ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿನ ಕೆಸ್ವಾನ್ ವಿಡಿಯೊ ಸಭಾಂಗಣದಲ್ಲಿ ಶುಕ್ರವಾರ ನಡೆದ ಕುಡಿಯುವ ನೀರು ಸರಬರಾಜು ಸೇರಿ ವಿವಿಧ ವಿಷಯಗಳ ಬಗ್ಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಮಾತನಾಡಿದರು.
ಮಳೆ ಅಭಾವದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ಬೋರ್ವೆಲ್, ಕೆರೆ ಇತರ ಮೂಲಗಳನ್ನು ಪತ್ತೆಮಾಡಬೇಕು. ನಗರ ಮತ್ತು ಗ್ರಾಮೀಣ ಭಾಗದ ಜನರಿಗೆ ಪೂರೈಕೆ ಮಾಡುವ ಕುಡಿಯುವ ನೀರು ಪೈಪ್ಗಳು ಸೋರಿಕೆ ಆಗದಂತೆ, ಕಲುಷಿತ ನೀರು ಸೇರದಂತೆ ಎಚ್ಚರವಹಿಸಿ, ನೀರಿನ ಟ್ಯಾಂಕರ್ಗಳನ್ನು ಸ್ವಚ್ಚಗೊಳಿಸಿ ನೀರು ಪೂರೈಕೆ ಮಾಡಬೇಕೆಂದು ನೀರು ಸರಬರಾಜು ಹಾಗೂ ಜಿ.ಪಂ, ತಾ.ಪಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ಗಳು ನೀರಿನ ಸಮಸ್ಯೆ ಕಂಡುಬಂದ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಪರಿಹರಿಸಬೇಕು. ತಾಲ್ಲೂಕು ಮಟ್ಟದ ಸಭೆ ನಡೆಸಿ ಎಲ್ಲ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಜಿಲ್ಲಾಮಟ್ಟದ ಸಭೆಯ ಸೂಚನೆಗಳನ್ನು ಪಾಲಿಸಬೇಕು. ನೀರು ಪೂರೈಕೆಗೆ ಜೆಸ್ಕಾಂ ಇಲಾಖೆ ಅಗತ್ಯ ವಿದ್ಯುತ್ ಪೂರೈಕೆ ಮಾಡಬೇಕು ಎಂದು ತಿಳಿಸಿದರು.
ನೀರಿನ ಎಲ್ಲ ಮೂಲಗಳನ್ನ ವಾರಕ್ಕೆ ಎರಡುಬಾರಿ ಪರೀಕ್ಷಿಸಿ ಬಿಡಬೇಕು ಎಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ಗ್ರಾ.ಪಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ: ಅನಾರೋಗ್ಯ ಪ್ರಕರಣಗಳು ಕಂಡು ಬಂದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸಿ ಚಿಕಿತ್ಸೆ ಒದಗಿಸಿ, ನಿಯಂತ್ರಣಕ್ಕೆ ಕ್ರಮವಹಿಸಿ ಜಾಗೃತಿ ಮೂಡಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಗ್ರಾ.ಪಂ ಅಧಿಕಾರಿಗಳಿಗೆ ತಿಳಿಸಿದರು.
ಜಿ.ಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ನೀರಿನ ಪರೀಕ್ಷಿಸಿದ ನಂತರ ಕುಡಿಯಲು ಯೋಗ್ಯವಲ್ಲದಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಇವೆಲ್ಲವುಗಳ ನಡುವೆ ವಾಂತಿ, ಬೇಧಿ, ಕಲುಷಿತ ನೀರು ಪ್ರಕರಣಗಳು ಕಂಡು ಬಂದರೆ ತಾ.ಪಂ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ ಎಂದರು
ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ. ಮಾತನಾಡಿ, ಈ–ಕೆವೈಸಿ ಮಾಡಿಸಿ, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿದ ಫಲಾನುಭವಗಳಿಗೆ ಮಾತ್ರ ಕಿಸಾನ್ ಸಮ್ಮಾನ್ ಹಣ ಜಮೆಯಾಗಲಿದೆ. ಈ ಕೈವೈಸಿ ಬಾಕಿ ಉಳಿಸಿಕೊಂಡ ರೈತರು ಜೂ.30 ಒಳಗೆ ಈ–ಕೆವೈಸಿ ಮಾಡಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯರಾಣಿ ಕೆ.ವಿ, ಸೇರಿ ಎಲ್ಲ ತಾಲ್ಲೂಕಿನ ತಹಶೀಲ್ದಾರ್, ತಾ.ಪಂ ಇಒ, ನಗರ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.