ಕುಷ್ಟಗಿ (ಕೊಪ್ಪಳ ಜಿಲ್ಲೆ): ವಾಂತಿ ಭೇದಿಗೆ ತುತ್ತಾಗಿದ್ದ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮದ ನಿರ್ಮಲಾ ಈರಪ್ಪ ಬೆಳಗಲ್ ಎಂಬ 10 ವರ್ಷದ ಬಾಲಕಿ ಗುರುವಾರ ಮೃತಪಟ್ಟಿದ್ದಾಳೆ.
ಬುಧವಾರ ರಾತ್ರಿ ವಾಂತಿ ಬೇಧಿ ಉಂಟಾಗಿತ್ತಾದರೂ ರಾತ್ರಿ ವೇಳೆ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲಿಲ್ಲ. ಗುರುವಾರ ಬೆಳಿಗ್ಗೆ ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮನೆಯಲ್ಲಿಯೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿ ಆಸ್ಪತ್ರೆಗೆ ಕರೆತರುವ ಮೊದಲೇ ಮೃತಪಟ್ಟಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.
ಕಲುಷಿತ ನೀರು ಸೇವನೆಯಿಂದಲೇ ವಾಂತಿ ಬೇಧಿ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿದ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರು ಮನೆಯವರು ಹೇಳಿರುವ ಪ್ರಕಾರ ಬಾಲಕಿಗೆ ವಾಂತಿ ಬೇಧಿ ಉಂಟಾಗಿತ್ತು, ಸಕಾಲದಲ್ಲಿ ಆಸ್ಪತ್ರೆಗೆ ಕರೆತಂದಿರಲಿಲ್ಲ. ಆದರೂ ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.
ಪಾಲಕರು ಗುಳೆ: ಬಾಲಕಿ 4ನೇ ತರಗತಿಯಲ್ಲಿ ಓದುತ್ತಿದ್ದು ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದಳು. ಆಕೆಯ ಪಾಲಕರು ದುಡಿಮೆ ಅರಸಿ ಕೇರಳ ರಾಜ್ಯಕ್ಕೆ ಗುಳೆ ಹೋಗಿದ್ದಾರೆ ಎಂದು ಬಿಜಕಲ್ ಗ್ರಾಮಸ್ಥ ಮನೋಹರ ಬಡಿಗೇರ ತಿಳಿಸಿದರು.
ಗ್ರಾಮಸ್ಥರಿಗೆ ಕುಡಿಯುವ ಶುದ್ಧ ನೀರಿನ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರೂ ಹೊಸ ಪ್ರಕರಣಗಳು ಮರುಕಳಿಸುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.