ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 5ರಂದು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿದೆ.
ಕೋವಿಡ್ ಕಾರಣ ಕಳೆದ ವರ್ಷ ಕಡಿಮೆ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಈ ಬಾರಿ ಭಕ್ತರ ಸಂಖ್ಯೆ ಹೆಚ್ಚಾಗಲಿದೆ. ಆದ್ದರಿಂದ ಜಿಲ್ಲಾಡಳಿತವು ಒಂದು ತಿಂಗಳು ಮೊದಲೇ ಸಿದ್ಧತಾ ಕಾರ್ಯ ಆರಂಭಿಸಿತ್ತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಭಾನುವಾರ (ಡಿ.4) ಗಂಗಾವತಿ, ಹೊಸಪೇಟೆ, ಕೊಪ್ಪಳಕ್ಕೆ ಬಂದು ವಾಸ್ತವ್ಯ ಮಾಡುವರು. ಮಾರನೇ ದಿನ ಸೋಮವಾರ ಮಾಲೆ ವಿಸರ್ಜನೆ ಮಾಡುವರು. ನಂತರ ಬೃಹತ್ ಶೋಭಾಯಾತ್ರೆಯಲ್ಲಿ ಭಾಗವಹಿಸುವರು.
‘ಕಳೆದ ಸಲಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದ್ದು, ಅವರಿಗೆ ವಸತಿ ಮತ್ತು ಇತರ ಸೌಕರ್ಯಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ’ ಎಂದು ಕಾರ್ಯಕ್ರಮದ ನೋಡಲ್ ಅಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ತಿಳಿಸಿದರು.