ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲಕ್ಷ ಮತಗಳ ಅಂತರದಲ್ಲಿ ಹಿಟ್ನಾಳ ಗೆಲುವು: ತಂಗಡಗಿ ವಿಶ್ವಾಸ

Published 22 ಮಾರ್ಚ್ 2024, 16:09 IST
Last Updated 22 ಮಾರ್ಚ್ 2024, 16:09 IST
ಅಕ್ಷರ ಗಾತ್ರ

ಕನಕಗಿರಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದರು.

ಸಮೀಪದ ಸೂಳೇಕಲ್ ಗ್ರಾಮದ ಮೈನುಸಾಬ ಅವರು ಗುರುವಾರ ಆಯೋಜಿಸಿದ್ದ ಇಪ್ತಿಯಾರ್ ಕೂಟದಲ್ಲಿ ಭಾಗವಹಿಸಿದ ಬಳಿಕ ಪತ್ರಕರ್ತರ ಜತೆ ಅವರು ಮಾತನಾಡಿದರು.

ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ತರಲು ಅಧಿಕಾರಕ್ಕೆ ಬಂದ ದಿನವೇ ಕ್ಯಾಬಿನೆಟ್ ಒಪ್ಪಿಗೆ‌ ನೀಡಿ ಅನುಷ್ಠಾನಗೊಳಿಸಲಾಗಿದೆ. ಶೇ 98ರಷ್ಟು ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿದೆ ಎಂದರು.

ಬಿಜೆಪಿಯವರಂತೆ ಸುಳ್ಳು ಹೇಳುವುದಿಲ್ಲ. ಕಪ್ಪು ಹಣ ತಂದು ದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ₹15 ಲಕ್ಷ ಜಮಾ ಮಾಡುವುದಾಗಿ ಹತ್ತು ವರ್ಷ ಕಳೆದರೂ ನಯಾ ಪೈಸೆ ಹಣ ಹಾಕಿಲ್ಲ ಎಂದು ಟೀಕಿಸಿದರು.

ಬಿಜೆಪಿ ಮಾಡಿಸಿದ ಜನ ಧನ್ ಖಾತೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಹಣ ಜಮಾ ಆಗುತ್ತಿದೆ ಎಂದು ಹೇಳಿದರು.

ರಾಜಶೇಖರ ಹಿಟ್ನಾಳ ಅವರಿಗೆ ಪಕ್ಷ ಟಿಕೆಟ್ ಘೋಷಣೆ ಮಾಡಿದೆ. ಕಾಂಗ್ರೆಸ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ. ಎರಡು ಸಲ ಹಿಟ್ನಾಳ ಕುಟುಂಬದವರು ಸೋಲುಂಡಿದ್ದಾರೆ. ಈ ಸಲ ಗೆಲುವು ಖಚಿತ ಎಂದು ಹೇಳಿದರು.

ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಪಟ್ಟಣ ಪಂಚಾಯಿತಿ ಸದಸ್ಯರಾದ ಶರಣೆಗೌಡ ಪಾಟೀಲ, ರಾಜಾಸಾಬ ನಂದಾಪುರ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಸಂತಗೌಡ ಪಾಟೀಲ, ಪ್ರಮುಖರಾದ ಸಿದ್ದಪ್ಪ ನೀರ್ಲೂಟಿ, ಗೋಸ್ಲೆಪ್ಪ ಗದ್ದಿ, ರಾಜಾಸಾಬ ಕಟ್ಟಿಮನಿ, ಟಿ.ಜೆ.ರಾಮಚಂದ್ರ, ಹನುಮೇಶ ಕಲಕೇರಿ, ರವಿ ಪಾಟೀಲ, ಮೈಬೂಬಸಾಬ ವಾಲೇಕಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT