ಕೊಪ್ಪಳ: ಜಿಲ್ಲೆಗೆ ಬಜೆಟ್ನಲ್ಲಿ ಮಂಜೂರಾದ ಜಾನಪದ ಲೋಕಕ್ಕೆ ₹ 2 ಕೋಟಿ ಅನುದಾನದ ಜೊತೆಗೆ ನನ್ನ ಖಾತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೂ ₹ 1.5 ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ ‘ಜಾನಪದ ಲೋಕಕ್ಕೆ ಜಿಲ್ಲಾಡಳಿತ ಸ್ಥಳ ಪರಿಶೀಲನೆ ನಡೆಸುತ್ತಿದೆ. ಜಿಲ್ಲೆಯಲ್ಲಿ ನೆನಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ಮರುಚಾಲನೆ ನೀಡಲು ಆದಷ್ಟು ಬೇಗನೆ ಸಭೆ ನಡೆಸಲಾಗುವುದು. ಜಲಸಂಪನ್ಮೂಲ ಖಾತೆ ಹೊಂದಿರುವ ಡಿ.ಕೆ. ಶಿವಕುಮಾರ್ ಅವರನ್ನು ಇಲ್ಲಿಗೆ ಕರೆತಂದು ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ಹೇಳಿದರು.
‘ಹಿಂದಿನ ಬಿಜೆಪಿ ಸರ್ಕಾರ ಹೆಸರಿಗೆ ಮಾತ್ರ ಜಿಲ್ಲೆಯಲ್ಲಿ ತೋಟಗಾರಿಕೆ ಪಾರ್ಕ್ ಮಾಡುವುದಾಗಿ ಘೋಷಣೆ ಮಾಡಿದೆ. ಪಾರ್ಕ್ ನಿರ್ಮಿಸಲು ಅಗತ್ಯವಿರುವ ಹಣವನ್ನೇ ಮೀಸಲಿಟ್ಟಿಲ್ಲ. ಈ ಬಗ್ಗೆ ಇಲಾಖೆ ಕಾರ್ಯದರ್ಶಿ ಜೊತೆ ಚರ್ಚಿಸಲಾಗಿದೆ. ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ₹ 120 ಕೋಟಿ ಅನುದಾನ ನೀಡಲಾಗಿದೆ ಎಂದು ಬಿಜೆಪಿ ಹೇಳಿತ್ತು. ಆದರೆ ಬಂದಿದ್ದು ₹ 20 ಕೋಟಿ ಮಾತ್ರ. ಪ್ರವಾಸೋದ್ಯಮ ಸಚಿವರ ಜೊತೆ ಚರ್ಚಿಸಿ ಅಲ್ಲಿನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಬಿಜೆಪಿಗೆ ಕರಗತ: ‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಮ್ಮ ಸರ್ಕಾರ ಉರುಳುತ್ತದೆ ಎಂದು ಕನಸು ಕಾಣುತ್ತಿದ್ದು, ನಮ್ಮ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ’ ಎಂದರು.
ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು ‘ಮೊದಲು ಬಿಜೆಪಿ ನಾಯಕರು ವಿಪಕ್ಷ ನಾಯಕನ್ನು ಆಯ್ಕೆ ಮಾಡಿಕೊಳ್ಳಲಿ. ನಾಯಕನನ್ನು ಆಯ್ಕೆ ಮಾಡಿಕೊಳ್ಳಲಾಗದ ಬಿಜೆಪಿ ನಾಯಕರು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ಅಡ್ಡ ದಾರಿಯಲ್ಲಿ ನಡೆಯುವುದು ಬಿಜೆಪಿಗೆ ಅಭ್ಯಾಸವಾಗಿದೆ. ಹೀಗಾಗಿ ಅಡ್ಡದಾರಿ ಹಿಡಿಯುವ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷಕ್ಕೆ ಜನ ದೊಡ್ಡ ಮಟ್ಟದ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.