ಕೊಪ್ಪಳ: ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೇರಿ ಇತರ ಸೌಲಭ್ಯಗಳನ್ನು ಹಿಂಪಡೆದ ರಾಜ್ಯ ಸರ್ಕಾರ ಅವುಗಳನ್ನು ವಾಪಸ್ ಕೊಡಬೇಕು. ಈ ಕುರಿತು ಮರು ಆದೇಶ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು ಬರಗಾಲದ ಸಂಕಷ್ಟದ ಸಮಯದಲ್ಲಿಯೂ ರಾಜ್ಯ ಸರ್ಕಾರ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಇಂಧನ ಸಚಿವ ಕೆ.ಜಿ. ಜಾರ್ಜ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೊದಲು ಐಪಿ ಸೆಟ್ ಗಳನ್ನು ಅಕ್ರಮ, ಸಕ್ರಮದಡಿ ಸೌಲಭ್ಯ ನೀಡಲಾಗುತ್ತಿತ್ತು. ಸೌರ ವಿದ್ಯುತ್ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯೋಜನೆ ಕಳೆದ ತಿಂಗಳು ರದ್ದುಪಡಿಸಲಾಗಿದೆ. ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಹಿಂದಿನ ಆದೇಶವನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಖಿಕವಾಗಿ ಹೇಳಿದ್ದಾರೆ. ಆದರೆ ಮರು ಆದೇಶ ಹೊರಡಿಸಿಲ್ಲ. ಮರು ಅದೇಶವಾಗುವ ತನಕ ಉಪವಾಸ ಸತ್ಯಾಗ್ರಹ ನಿರಂತರ ಎಂದರು.
ಸರ್ಕಾರ ನಿರಂತರ ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಕಾರಣ ರೈತರು ಇರುವ ಬೆಳೆ ಉಳಿಸಿಕೊಳ್ಳಲು ಪರದಾಡುವ ಪರಿಸ್ಥಿತಿ ಎದುರಾಗಿದೆ.ಮೊದಲೇ ರಾಜ್ಯದಲ್ಲಿ ಬರ ಇದೆ ಎಂದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಹಾಗೂ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.