ಕೊಪ್ಪಳ: ‘ಲೋಕಸಭಾ ಚುನಾವಣೆಯ ಕಾರ್ಯಗಳನ್ನು 24X7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.
‘ಮಾ.16ರಿಂದ ಆರಂಭವಾಗಿರುವ ಚುನಾವಣಾ ನೀತಿ ಸಂಹಿತೆ ಜೂನ್ ಮೊದಲ ವಾರದ ತನಕ ಜಾರಿಯಲ್ಲಿರುತ್ತದೆ. ಈಗಾಗಲೇ ಚುನಾವಣಾ ಕೆಲಸ ನಿರ್ವಹಿಸಲು ಜಿಲ್ಲೆಯಲ್ಲಿ ಸರ್ಕಾರಿ, ಅರೆ ಸರ್ಕಾರಿ ಇಲಾಖೆಗಳ, ಶೈಕ್ಷಣಿಕ ಸಂಸ್ಥೆಗಳು ಮತ್ತು ಶಾಲಾ ಕಾಲೇಜುಗಳ ಅಧಿಕಾರಿ, ಸಿಬ್ಬಂದಿ ತಂಡ ನಿಯೋಜಿಸಲಾಗಿದೆ’ ಎಂದು ತಿಳಿಸಿದ್ದಾರೆ.
‘ಚುನಾವಣೆಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಚುನಾವಣೆಗೆ ಸಂಬಂಧಿಸಿದಂತೆ ಕೋರುವ ವರದಿಗಳನ್ನು ವಿಳಂಬ ಮಾಡದೆ ನಿಗದಿತ ಸಮಯದೊಳಗೆ ಆಯೋಗಕ್ಕೆ ಸಲ್ಲಿಸಬೇಕಾಗಿದೆ. ಆದ್ದರಿಂದ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕೆಲಸ ಮಾಡಬೇಕು. ತುರ್ತು ಸಂದರ್ಭದಲ್ಲಿ ಕೇಂದ್ರ ಸ್ಥಾನ ಬಿಡುವ ಅನಿವಾರ್ಯತೆಯಿದ್ದರೆ ಕಡ್ಡಾಯವಾಗಿ ಮೇಲಧಿಕಾರಿಗಳ ಅನುಮತಿ ಪಡೆದುಕೊಳ್ಳಬೇಕು’ ಎಂದು ಸೂಚಿಸಿದ್ದಾರೆ.