ಯಲಬುರ್ಗಾ: ಮಹಿಳೆಯರ ಅಭಿವೃದ್ಧಿ ಹಾಗೂ ರಕ್ಷಣೆಗೆ ಸರ್ಕಾರದಿಂದ ಸಾಕಷ್ಟು ಯೋಜನೆಗಳಿವೆ. ಇವುಗಳ ಸದ್ಬಳಕೆಯಿಂದ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿ ಕಂಡುಕೊಳ್ಳಬಹುದು ಎಂದು ಕಿರಿಯ ಶ್ರೇಣಿ ನ್ಯಾಯಾಧೀಶೆ ಆಯಿಶಾಬಿ ಮಜಿದ್ ಹೇಳಿದರು.
ಪಟ್ಟಣದ ಕೋರ್ಟ್ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಬೇಕು. ಮಹಿಳೆಯರು ಅಬಲೆಯಲ್ಲ ಸಬಳಾಗಿದ್ದಾಳೆ. ಅನುಕಂಪದ ಬದಲಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟರೆ ಪುರುಷರಿಗಿಂತಲೂ ಹೆಚ್ಚಿನ ರೀತಿಯಲ್ಲಿ ಸಾಧನೆ ಮಾಡಬಲ್ಲರು ಎಂದು ಅಭಿಪ್ರಾಯಪಟ್ಟರು.
ಹಿರಿಯ ಶ್ರೇಣಿ ನ್ಯಾಯಾಧೀಶ ವಿಜಯಕುಮಾರ ಕೊಣ್ಣೂರ ಮಾತನಾಡಿ, ಮಹಿಳೆಯರನ್ನು ಪೂಜ್ಯನೀಯ ಭಾವನೆಯಿಂದ ಕಾಣುವುದು ಮುಖ್ಯವಲ್ಲ. ಅವರ ಸಾಮರ್ಥ್ಯಗಳನ್ನು ಸಾಬೀತುಪಡಿಸಲು ಅವಕಾಶದ ಜತೆಗೆ ಪ್ರೋತ್ಸಾಹವೂ ಅಗತ್ಯ. ಈಚೆಗೆ ಮಹಿಳೆಯರು ಹೆಚ್ಚಿನ ಸಾಧನೆ ಮಾಡಿ ಮಾದರಿ ಆಗುತ್ತಿದ್ದಾರೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಬೇಲೆರಿ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕಾನೂನಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಜನರಲ್ಲಿ ವಿವಿಧ ಕಾನೂನಿನ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಸರ್ಕಾರಿ ವಕೀಲ ಮಲ್ಲನಗೌಡ ಎಸ್. ಪಾಟೀಲ ಕುಟುಂಬ ನಿರ್ವಹಣೆಯಲ್ಲಿ ಯಶಸ್ವಿಯಾಗಿರುವ ಮಹಿಳೆ ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಹೊಂದಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡಿದ್ದಾರೆ ಎಂದರು.