ಕೊಪ್ಪಳ: ಇಲ್ಲಿನ ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯ ಚಿಕ್ಕಮಕ್ಕಳ ವಾರ್ಡ್ನ ಶೌಚಾಲಯದಲ್ಲಿ ಇತ್ತೀಚೆಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ.
ವಾರ್ಡ್ನ ಸಿಬ್ಬಂದಿ ಕನಕಪ್ಪ ಎಂಬುವರು ಶೌಚಾಲಯ ಸ್ವಚ್ಛಗೊಳಿಸುತ್ತಿದ್ದಾಗ ಮೃತದೇಹ ಪತ್ತೆಯಾಗಿರುವ ವಿಷಯ ಗೊತ್ತಾಯಿತು. ಶೌಚಾಲಯದಲ್ಲಿ ನೀರು ಸರಾಗವಾಗಿ ಹರಿದು ಹೋಗುತ್ತಿರಲಿಲ್ಲ. ಯಾಕೆಂದು ಪರಿಶೀಲಿಸಿದಾಗ ಅದರಲ್ಲಿ ಮಗುವಿನ ದೇಹ ತುರುಕಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಜಿಲ್ಲಾ ಶಸ್ತ್ರಚಿಕಿತ್ಸಕ ಸುಶೀಲ್ ಕುಮಾರ್ ಕಲಾಲ್ ಕೊಪ್ಪಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಕಳೆದ ವರ್ಷದ ಜೂನ್ನಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಇಂಥದ್ದೇ ಘಟನೆ ನಡೆದಿತ್ತು.
ದೂರು: ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ‘ಆಸ್ಪತ್ರೆ ನಿರ್ವಹಣೆಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ವರ್ಷದ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು ದುರಂತ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಜರುಗಿಸಬೇಕು’ ಎಂದು ಹೇಳಿದ್ದಾರೆ.
‘ಮಗುವಿನ ಜೀವ ತೆಗೆಯುವ ಮೂಲಕ ಅಪರಾಧ ಕೃತ್ಯ ಎಸಗಿದ್ದಾರೆ, ಜೀವಿಸುವ ಹಕ್ಕು ಕಿತ್ತುಕೊಳ್ಳಲು ಆಯೋಗ ಬಿಡುವದಿಲ್ಲ. ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಆಯೋಗದಲ್ಲಿ ಸ್ವಯಂ ದೂರು ದಾಖಲಿಸಿ ಕೊಳ್ಳಲಾಗುವುದು, ಆಸ್ಪತ್ರೆಯಲ್ಲಿ ಮಮತೆಯ ತೊಟ್ಟಿಲು ಇರಿಸಲಾಗುವುದು’ ಎಂದಿದ್ದಾರೆ.