ಕನಕಗಿರಿ: ತಾಲ್ಲೂಕಿನ ಚಿಕ್ಕಮಾದಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿ ಕೆ.ವಿ.ಕಾವ್ಯಾರಾಣಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು,‘ನರೇಗಾ ಯೋಜನೆಯಲ್ಲಿ ವೈಯಕ್ತಿಕ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ಇದೆ. ರೈತರು ಜಮೀನುಗಳಲ್ಲಿ ಕಂದಕ ಬದು ನಿರ್ಮಾಣ ಮಾಡಿದರೆ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ’ ಎಂದು ತಿಳಿಸಿದರು.
ಬದು ನಿರ್ಮಾಣದಿಂದ ಕೊಳವೆಬಾವಿ ರಿಚಾರ್ಜ್ ಆಗಲು ಸಹಕಾರಿ ಆಗುತ್ತದೆ. ಬದುಗಳಲ್ಲಿ ತೇವಾಂಶ ಹೆಚ್ಚಾಗುವುದರಿಂದ ಲಾಭದಾಯಕ ತೋಟಗಾರಿಕೆ ಬೆಳೆಗಳನ್ನು ಬೆಳೆಯಬಹುದು ಎಂದರು.
ಸಮುದಾಯ ಕಾಮಗಾರಿಗಳ ಜತೆಗೆ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ಈ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡು ರೈತರು ಅಭಿವೃದ್ಧಿ ಹೊಂದಬೇಕು ಎಂದು ಅವರು ಸಲಹೆ ನೀಡಿದರು.
ಗಂಗಾವತಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ಮೋಹನ್ ಮಾತನಾಡಿ,‘ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನರೇಗಾ ಯೋಜನೆ ಸಹಕಾರಿಯಾಗಿದೆ. ಬದುಗಳಲ್ಲಿ ಅರಣ್ಯೀಕರಣ ಮಾಡಲು ಅವಕಾಶವಿದ್ದು, ರೈತರು ಬದುಗಳಲ್ಲಿ ಸಸಿಗಳನ್ನು ಬೆಳೆಸಲು ಮುಂದಾಗಬೇಕು’ ಎಂದು ತಿಳಿಸಿದರು. .
ತಾ.ಪಂ. ಸಹಾಯಕ ನಿರ್ದೇಶಕ ಚಂದ್ರಶೇಖರ ಕಂದಕೂರು, ತಾಂತ್ರಿಕ ಸಂಯೋಜಕ ಅಕ್ಷಯ್ ಅರ್ಲೂರು, ತಾಲ್ಲೂಕು ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ಎಂಐಎಸ್ ಸಂಯೋಜಕ ಚನ್ನಬಸಪ್ಪ, ಗ್ರಾ.ಪಂ. ಕಾರ್ಯದರ್ಶಿ ಯಂಕೋಬ ಹಾಗೂ ಸಿಬ್ಬಂದಿ ಇದ್ದರು.