ಗಂಗಾವತಿ: ‘ಕೋವಿಡ್ ಕಾರಣ ಕೇಂದ್ರ ಸರ್ಕಾರ ಇಲ್ಲಿನ ಉಪವಿಭಾಗ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ ಮಂಜೂರು ಮಾಡಿದೆ’ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.
ನಗರದ ಉಪವಿಭಾಗ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕಾಗಿ ಸರಬರಾಜು ಮಾಡಲಾದ ಸಾಮಗ್ರಿ ಪರಿಶೀಲಿಸಿ ಮಾತನಾಡಿದರು.
ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಸಾಕಷ್ಟು ಜನ ಪ್ರಾಣ ಬಿಟ್ಟಿದ್ದಾರೆ. ತಾಲ್ಲೂಕಿನಲ್ಲಿ ಮುಂದೆ ಆಮ್ಲಜನಕದ ಕೊರತೆ ಆಗದಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ್ ಸವಡಿ ಮಾತನಾಡಿ,‘ಘಟಕ ಸ್ಥಾಪನೆಗೆ ಸಿದ್ದತೆ ನಡೆಸಿ, ಆರಂಭದಲ್ಲಿ ಪ್ರಾಯೋಗಿಕ ಪರೀಕ್ಷೆ ಮಾಡಲಾಗುತ್ತದೆ’ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷ ಹನಮಂತಪ್ಪ ನಾಯಕ, ಜೋಗದ ನಾರಾಯಣಪ್ಪ ಸೇರಿ ವೈದ್ಯಕೀಯ ಸಿಬ್ಬಂದಿ ಇದ್ದರು.