ಗಂಗಾವತಿ: ವಿಧಾನಸೌಧದಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಇದು ಖಂಡನೀಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದೂ ಕೂಗಿರುವ ಬಗ್ಗೆ ಬಲವಾದ ಆರೋಪ ಕೇಳಿ ಬರುತ್ತಿದೆ. ಇಂತಹ ಹೇಯ ವರ್ತನೆಗಳು ದೇಶಕ್ಕೆ ಯಾವ ಸಂದೇಶ ನೀಡುತ್ತಿವೆ. ಭಾರತ ದೇಶದಲ್ಲಿದ್ದೂ ಪರಕೀಯ ದೇಶದ ಪರವಾಗಿ ಘೋಷಣೆ ಕೂಗುತ್ತಾರಲ್ಲ. ಇವೆರೆಲ್ಲರೂ ದೇಶದ್ರೋಹಿಗಳು. ಇದರಿಂದ ದೇಶದ ಸಾರ್ವಭೌಮತೆ ಮತ್ತು ಅಖಂಡತೆಗೆ ಧಕ್ಕೆ ಉಂಟಗಾಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವೇ ಹೆಚ್ಚಾಗಿದೆ ಎಂದರು.
ಕಾಂಗ್ರೆಸ್ ದೇಶವನ್ನು ಒಡೆದಾಳುವ ನೀತಿಗೆ ಮುಂದಾಗಿದ್ದು, ಜನರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಬೇಕು. ಜೊತೆಗೆ ಪಾಕಿಸ್ತಾನ್ ಜಿಂದಾಬಾದ್ ಎಂದೂ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸಿ, ಕಠಿಣ ಶಿಕ್ಷ ನೀಡಬೇಕು ಎಂದಿದ್ದಾರೆ.