ಕನಕಗಿರಿ (ಕೊಪ್ಪಳ): ಕನಕಗಿರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಶಿವಪುತ್ರಪ್ಪ ಬಿಳಿಗುಡ್ಡ (43) ಇಲ್ಲಿನ ವೆಂಕಟಪತಿ ಬಾವಿಯ ಸಮೀಪ ವಾಯುವಿಹಾರಕ್ಕೆ ಬಂದಿದ್ದ ವೇಳೆ ಆಯತಪ್ಪಿ ಕಾಲುಜಾರಿ ಬಿದ್ದು ಶುಕ್ರವಾರ ಮೃತಪಟ್ಟಿದ್ದಾರೆ.
ಬಾವಿಯಲ್ಲಿ ಬಿದ್ದಾಗ ಬಲಗಾಲಿನ ಮೊಣಕಾಲು ಮತ್ತು ತಲೆಗೆ ಬಲವಾಗಿ ಪೆಟ್ಟು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿವಪುತ್ರಪ್ಪ ಮೂಲತಃ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಗ್ರಾಮದವರು. ಈ ಮೊದಲು ಅಳವಂಡಿ, ಕುಷ್ಟಗಿ ಮತ್ತು ಗಂಗಾವತಿ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಪಿಐ ವಿ. ನಾರಾಯಣ ಅವರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮೃತರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.