ಕುಷ್ಟಗಿ: ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಮಹಾಕಾವ್ಯದಲ್ಲಿನ ಆದರ್ಶಗಳು ಉತ್ತಮ ನಾಗರಿಕರಾಗಿ ಬಾಳುವಂತೆ ಪ್ರೇರಣೆ ನೀಡುತ್ತವೆ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.
ಪಟ್ಟಣದ ಬುತ್ತಿಬಸವೇಶ್ವರ ಸಭಾಭವನದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿಯವರು ಚಿತ್ರಿಸಿರುವಂತೆ ರಾಮಾಯಣದಲ್ಲಿನ ಶ್ರೀರಾಮನ ತತ್ವ, ಆದರ್ಶ ಗುಣಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಬಹಳಷ್ಟು ಬದಲಾವಣೆಯನ್ನು ಕಾಣಲು ಸಾಧ್ಯವಾಗುತ್ತದೆ. ಅವುಗಳು ನಮ್ಮ ಬದುಕಿನ ಭಾಗವಾಗುತ್ತವೆ ಎಂಬ ಕಾರಣಕ್ಕೆ ರಾಮಾಯಣ ಗ್ರಂಥವನ್ನು ಮನೆಯಲ್ಲಿಟ್ಟು ಪ್ರತಿಯೊಬ್ಬ ಭಾರತೀಯ ಪೂಜಿಸುತ್ತಾರೆ ಎಂದರು.
ಶಿಕ್ಷಕ ಆರ್.ಕೆ.ಸುಬೇದಾರ್ ವಿಶೇಷ ಉಪನ್ಯಾಸ ನೀಡಿದರು. ತಹಶೀಲ್ದಾರ್ ಎಂ.ಸಿದ್ದೇಶ್, ಸಿ.ಎಂ.ಹಿರೇಮಠ, ಮಾಲತಿ ನಾಯಕ, ಭಾರತೀ ನೀರಗೇರಿ, ಸರ್ಕಲ್ ಇನ್ಸ್ಪೆಕ್ಟರ್ ಎನ್.ಆರ್.ನಿಂಗಪ್ಪ ಇತರರು ಮಾತನಾಡಿದರು.
ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ, ಮುಖ್ಯಾಧಿಕಾರಿ ಉಮೇಶ್ ಹಿರೇಮಠ, ತಾಲ್ಲೂಕು ವಾಲ್ಮೀಕಿ ನಾಯಕ ಸಮುದಾಯ ಸಂಘಟನೆ ಅಧ್ಯಕ್ಷ ಬಸವರಾಜ ನಾಯಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಯರಾಂ ಚವ್ಹಾಣ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಮರೇಗೌಡ ಪಾಟೀಲ, ಪುರಸಭೆ ಸದಸ್ಯರಾದ ರಾಜೇಶ ಪತ್ತಾರ, ಮಹಾಂತೇಶ್ ಕಲ್ಲಬಾವಿ, ಬಸವರಾಜ ಬುಡಕುಂಟಿ, ಜೆ.ಜಿ.ಆಚಾರ್, ಮಹಿಬೂಬ ಕಮ್ಮಾರ, ಅಂಬಣ್ಣ ಬಜಂತ್ರಿ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಕೆ.ಶರಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮಗ್ಗದ, ಬಿಆರ್ಸಿ ಸಮನ್ವಯಾಧಿಕಾರಿ ಶ್ರೀಶೈಲ ಸೋಮನಕಟ್ಟಿ, ಸಬ್ ಇನ್ಸ್ಪೆಕ್ಟರ್ ತಿಮ್ಮಣ್ಣ ನಾಯಕ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ವೀರಪ್ಪ, ಫಕೀರಪ್ಪ ಚಳಗೇರಿ, ದೇವಪ್ಪ ಗಂಗನಾಳ, ರಮೇಶ್ ಕೊಳ್ಳಿ ಇತರರು ಇದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಾಲ್ಮೀಕಿ ನಾಯಕ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕೋವಿಡ್ ನಿಯಮಗಳ ಅನುಸಾರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಪ್ರಾರಂಭದಲ್ಲಿ ವಾಲ್ಮೀಕಿ ಮಹರ್ಷಿ ಭಾವಚಿತ್ರಕ್ಕೆ ಶಾಸಕರು ಹಾಗೂ ಗಣ್ಯರು ಪುಷ್ಪಾರ್ಚನೆ ನಡೆಸಿದರು. ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲ ಸರ್ಕಾರಿ ಕಚೇರಿ, ಗ್ರಾಮ ಪಂಚಾಯಿತಿಗಳಲ್ಲಿಯೂ ವಾಲ್ಮೀಕಿ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.