ಹನುಮಸಾಗರ: ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶಗೌಡ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಅವರನ್ನು ಭೇಟಿಯಾಗಿ ಖಾಲಿ ಇರುವ ಮುಖ್ಯಶಿಕ್ಷಕರ ಹುದ್ದೆಗಳನ್ನು ಕೌನ್ಸಲಿಂಗ್ಗೆ ಅಳವಡಿಸುವಂತೆ ಮನವಿ ನೀಡಿದರು.
ಜಿಲ್ಲೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಸುಮಾರು 15 ವರ್ಷಗಳಿಂದ ಮುಖ್ಯ ಶಿಕ್ಷಕರ ಹುದ್ದೆ ಮಂಜೂರು ಆಗಿಲ್ಲ. 2018-19ನೇ ಸಾಲಿನ ಮತ್ತು 2019ನೇ ಸಾಲಿನಲ್ಲಿ ಹೊಸದಾಗಿ ಪ್ರಾರಂಭವಾದ ಆರ್ಎಂಎಸ್ಎ ಮತ್ತು ಕೆ.ಕೆ.ಆರ್.ಡಿ.ಬಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಮಂಜೂರಾತಿ ಮಾಡಬೇಕು ಎಂದರು.
ಈ ಎಲ್ಲ ಹುದ್ದೆಗಳನ್ನು ಪ್ರಸ್ತುತ ಮುಖ್ಯ ಶಿಕ್ಷಕರ ಬಡ್ತಿ ನೀಡುವ ಸಂದರ್ಭದಲ್ಲಿ ಈ ಹುದ್ದೆಗಳನ್ನು ಕೌನ್ಸಲಿಂಗ್ನಲ್ಲಿ ಅಳವಡಿಸಬೇಕೆಂದು ಹಾಗೂ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಸಚಿವರು ಇದಕ್ಕೆ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಕೊಳ್ಳಲಾಗುವುದು ಎಂದು ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.