ಗಂಗಾವತಿ: ರೈತ ಸಂಪರ್ಕ ಕೇಂದ್ರದಿಂದ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ ಸಲಹೆ ನೀಡಿದರು.
ತಾಲ್ಲೂಕಿನ ವೆಂಕಟಗಿರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಶೇಂಗಾ ಮತ್ತು ಕಡಲೆ ಬೀಜ ವಿತರಣೆ ಮಾಡಿ ಅವರು ಮಾತನಾಡಿದರು.
ರೈತರಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ಸಬ್ಸಿಡಿಯಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ. ರೈತರು ಈ ಬಿತ್ತನೆ ಬೀಜಗಳನ್ನು ಖರೀದಿಸಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರುದ್ರಪ್ಪ, ಪ್ರಮುಖರಾದ ಈರಪ್ಪ, ಶಿವಪ್ಪ, ದೊಡ್ಡರಾಮನಗೌಡ ವಡ್ಡರಹಟ್ಟಿ, ಬೆಟ್ಟಪ್ಪ ಈಡಿಗೇರ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ನಯನದೇವಿ ಹಾಗೂ ಸಹಾಯಕಿ ಸರೋಜ ಇದ್ದರು.