ವೆಂಕಟಗಿರಿ (ಗಂಗಾವತಿ): ‘ರೈತರು ಸದ್ಯ ಬಿತ್ತನೆ ಕಾರ್ಯ ಆರಂಭ ಮಾಡಿದ್ದಾರೆ. ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ಪರಣ್ಣ ಮುನವಳ್ಳಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ವೆಂಕಟಗಿರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಶನಿವಾರ ನಡೆದ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲ್ಲೂಕಿನ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ರೈತರು ಜಮೀನುಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ. ಅವರ ಅನುಕೂಲಕ್ಕೆ ತಕ್ಕ ಹಾಗೆ ಅಧಿಕಾರಿಗಳು ಬೀಜ ವಿತರಣೆ ಮಾಡಬೇಕು. ಕಳಪೆ ಗುಣಮಟ್ಟದ ಬೀಜ ವಿತರಣೆ ಮಾಡುವಂತಿಲ್ಲ. ಒಂದು ವೇಳೆ ಬೀಜ ಕಳಪೆ ಇರುವುದು ಗಮನಕ್ಕೆ ಬಂದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು.
ನಂತರ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಲಾಯಿತು.
ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೆರುದ್ರಸ್ವಾಮಿ, ಪ್ರಮುಖರಾದ ಚನ್ನಪ್ಪ ಮಳಗಿ, ಸಿದ್ಧಲಿಂಗಯ್ಯ, ಶರಣಯ್ಯಸ್ವಾಮಿ, ಆರ್.ದೇವಾನಂದ್, ಅಮರೇಗೌಡ್ರು ಹಾಗೂ ಮಂಜುನಾಥ ಇದ್ದರು.