ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯೇತರ ಶಾಸಕರ ಕ್ಷೇತ್ರಗಳಿಗೆ ಬಿಡಿಗಾಸೂ ಇಲ್ಲ: ಶಾಸಕ ಬಯ್ಯಾಪುರ ಆರೋಪ

‘ತಾರತಮ್ಯ ನೀತಿಯ ಪರಮಾವಧಿ’
Last Updated 1 ಮಾರ್ಚ್ 2021, 5:36 IST
ಅಕ್ಷರ ಗಾತ್ರ

ಕುಷ್ಟಗಿ: ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಬಿಜೆಪಿಯೇತರ ಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಬಿಡಿಗಾಸು ಅನುದಾನವನ್ನೂ ಹಂಚಿಕೆ ಮಾಡಿಲ್ಲ. ಇದು ತಾರತಮ್ಯ ನೀತಿಯ ಪರಮಾವಧಿಯಾಗಿದೆ. ಹಿಂದಿನ ಯಾವುದೇ ಸರ್ಕಾರಗಳು ಈ ರೀತಿ ನಡೆದುಕೊಂಡಿರಲಿಲ್ಲ’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿಗೆ ಮಾ.1 ರಂದು ಸಚಿವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು,‘ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ಅನುದಾನ ಹಂಚಿಕೆ ವಿಷಯದಲ್ಲಿ ಹಿಂದೆ ಆಯಾ ಪಕ್ಷಗಳ ಸರ್ಕಾರಗಳು ಅಧಿಕಾರದಲ್ಲಿದ್ದಾಗ ತಮ್ಮ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಅಘೋಷಿತ ಸಂಪ್ರದಾಯ ಇತ್ತು ಎಂಬುದನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಅದೇ ರೀತಿ ಬೇರೆ ಬೇರೆ ಪಕ್ಷಗಳ ಶಾಸಕರು ಇರುವ ಕ್ಷೇತ್ರಗಳಿಗೂ ಕನಿಷ್ಠ ಶೇಕಡ ಅರ್ಧದಷ್ಟಾದರೂ ಅನುದಾನ ನೀಡಲಾಗುತ್ತಿತ್ತು. ಆದರೆ ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಬೇರೆ ಪಕ್ಷಗಳಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಒಟ್ಟಾರೆ ಹಣ ನೀಡದೆ ಶೇಕಡ ನೂರಕ್ಕೆ ನೂರರಷ್ಟು ಅನ್ಯಾಯ ನೀತಿ ಮುಂದುವರಿಸಿದೆ’ ಎಂದು ಅತೃಪ್ತಿ ಹೊರಹಾಕಿದರು.

‘ಈ ಹಿಂದೆ ಕಾಂಗ್ರೆಸ್‌–ಜೆಡಿಎಸ್‌ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಈ ಕ್ಷೇತ್ರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗೆ ₹4-5 ಕೋಟಿ ಮೊತ್ತದ ಕಾಮಗಾರಿಗಳಿಗೆ ಮಂಜೂರಾತಿ ನೀಡಿದ್ದರು.ಬಹಳಷ್ಟು ಶ್ರಮಪಟ್ಟು ಆ ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆ ನಡೆಸಲಾಗುತ್ತಿದೆ’ ಎಂದರು.

‘ಸಮಿಶ್ರ ಸರ್ಕಾರ ಇದ್ದಾಗ ಮಂಜೂರಾದ ಕಾಮಗಾರಿಗಳಿಗೆ ಇನ್ನೂ ಹಣ ನೀಡಿಲ್ಲ. ಹಾಗಂತ ಸಿಟ್ಟಿಗೆದ್ದು ಮಾತನಾಡಿದರೂ ಪ್ರಯೋಜನವಿಲ್ಲ. ಸುಮ್ಮನೆ ಕುಳಿತುಕೊಳ್ಳದೆ ಸಾಧ್ಯವಿರುವ ಕೆಲಸಗಳಿಗೆ ಚಾಲನೆ ನೀಡುತ್ತಿದ್ದೇನೆ. ಅಧಿವೇಶನದಲ್ಲಿಯ ಗಂಟಲು ಹರಿದುಕೊಂಡರೂ ಈ ಸರ್ಕಾರಕ್ಕೆ ಕಿವಿ ಇಲ್ಲ. ಸ್ವತಃ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಪತ್ರ ನೀಡಿದರೂ ಒಂದು ರೂಪಾಯಿ ಕೊಡಲಿಲ್ಲ’ ಎಂದು ಆರೋಪಿಸಿದರು.

‘ಸಚಿವ ಕೆ.ಎಸ್‌.ಈಶ್ವರಪ್ಪ ಪ್ರವಾಸದ ಕುರಿತು ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕಾರಿಗಳು ಹೇಳಿದ್ದಾರೆ. ಆದರೂ ಸಚಿವರ ಪ್ರಗತಿ ಪರಿಶೀಲನೆ ವೇಳೆ ಹಾಜರಿರುತ್ತೇನೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT