ಕುಷ್ಟಗಿ: ‘ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಪ್ರತಿಯೊಬ್ಬರಲ್ಲೂ ಕಾನೂನಿನ ತಿಳಿವಳಿಕೆ ಹೊಂದುವುದು ಅಗತ್ಯವಾಗಿದ್ದು, ಕಾನೂನು ಸೇವಾ ಪ್ರಾಧಿಕಾರ ಕಾರ್ಯಾಗಾರದ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿದೇವಿ ಹೇಳಿದರು.
ತಾಲ್ಲೂಕಿನ ತಳುವಗೇರಾ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ನಿಮಿತ್ತ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಎಲ್ಲರಿಗೂ ಉಚಿತವಾಗಿ ಕಾನೂನು ನೆರವು ನೀಡಬೇಕು ಎಂಬುದು ಪ್ರಾಧಿಕಾರದ ಧ್ಯೇಯೋದ್ದೇಶವಾಗಿದೆ. ಕಾನೂನು ಸೇವಾ ಸಮಿತಿ ವತಿಯಿಂದ ಜನತಾ ನ್ಯಾಯಾಲಯ ಏರ್ಪಡಿಸುವ ಮೂಲಕ ಜನರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲಾಗುತ್ತದೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು, ಉತ್ತಮ ವಿದ್ಯೆ ಕಲಿತು ಮನೆ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು’ ಎಂದು ಹೇಳಿದರು.
ಕಾನೂನು ಸೇವೆ ಪ್ರಾಧಿಕಾರಿಗಳ ಅಧಿನಿಯಮ ಕುರಿತು ವಕೀಲ ಬಿ.ಡಿ.ಅಪ್ಪೋಜಿ ವಿಶೇಷ ಉಪನ್ಯಾಸ ನೀಡಿದರು.
ಮುಖ್ಯಶಿಕ್ಷಕ ಸಂಗಪ್ಪ ಕಿರೇಸೂರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಭ್ರಷ್ಟಾಚಾರ ವಿರೋಧಿಸುವ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಸಂಗಪ್ಪ ಕಿರೇಸೂರು, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ವಿಜಯಮಹಾಂತೇಶ ಕುಷ್ಟಗಿ ಇತರರು ಕಾರ್ಯಕ್ರಮ ಕುರಿತು ಮಾತನಾಡಿದರು.
ಸಂಘದ ಜಂಟಿ ಕಾರ್ಯದರ್ಶಿ ಮೈನುದ್ದೀನ್, ಸರ್ಕಾರಿ ವಕೀಲೆ ಇಂದಿರಾ ಸುಹಾಸಿನಿ ಇತರರು ಇದ್ದರು.
ಶಿಕ್ಷಕರಾದ ಗೋವಿಂದರಾಜ ನಿರೂಪಿಸಿದರು. ನಾಗರಾಜ ಸ್ವಾಗತಿಸಿದರು. ರಾಜೇಂದ್ರ ವಂದಿಸಿದರು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.