ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹನುಮಮಾಲಾ ವಿಸರ್ಜನೆ |ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ: ಸಚಿವ ಶಿವರಾಜ ತಂಗಡಗಿ

ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ: ಪೂರ್ವ ಸಿದ್ಧತೆ ಸಭೆ
Published 17 ಡಿಸೆಂಬರ್ 2023, 16:09 IST
Last Updated 17 ಡಿಸೆಂಬರ್ 2023, 16:09 IST
ಅಕ್ಷರ ಗಾತ್ರ

ಗಂಗಾವತಿ: ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಹನುಮಮಾಲಾ ವಿಸರ್ಜನಾ ಕಾರ್ಯಕ್ರ ಮಕ್ಕೆ ಆಗಮಿಸುವ ಮಾಲಾಧಾರಿಗಳಿಗೆ ಮೂಲಭೂತ ಸೌಲಭ್ಯಗಳ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾ.ಪಂ ಮಂಥನ ಸಭಾಂಗಣದಲ್ಲಿ ಭಾನುವಾರ ಹನುಮಮಾಲಾ ವಿಸರ್ಜನೆಗೆ ಮೂಲ ಸೌಲಭ್ಯ ಕಲ್ಪಿಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಅಂಜನಾದ್ರಿಯಲ್ಲಿ ಡಿ.23, 24ರಂದು ಎರಡು ದಿನ ಹನುಮ ಮಾಲಾ ವಿಸರ್ಜನೆ ಕಾರ್ಯಕ್ರಮ ಜರುಗಲಿದ್ದು, ಸಾವಿರಾರು ಸಂಖ್ಯೆಯ ಮಾಲಾಧಾರಿಗಳಿಗೆ ಅಂಜನಾದ್ರಿಗೆ ಭೇಟಿ ನೀಡಿ ಮಾಲೆ ವಿಸರ್ಜನೆ ಮಾಡಲಿದ್ದಾರೆ. ಹಾಗಾಗಿ ಅಂಜನಾದ್ರಿ ಬಳಿ ಪಾರ್ಕಿಂಗ್, ಕುಡಿಯುವ ನೀರು, ಊಟ, ಸ್ನಾನ ಗೃಹಗಳ ವ್ಯವಸ್ಥೆ ಕಲ್ಪಿಸಬೇಕು. ಹಾಗೇ ವಸತಿ, ವೈದ್ಯಕೀಯ, ಸಂಚಾರ ದಟ್ಟಣೆ, ಶೌಚಾಲಯ, ರಸ್ತೆ ಮಾರ್ಗದಲ್ಲಿ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಜಿಲ್ಲಾ, ತಾಲ್ಲೂಕು ಆಡಳಿತದ ಅಧಿಕಾರಿಗಳನ್ನು ಒಳಗೊಂಡ 14 ಸಮಿತಿಗಳು ರಚಿಸಿ, ಮಾಡಬೇಕಾದ ಕೆಲಸದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಎಲ್ಲರೂ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು ಎಂದರು.

ಸಮಿತಿಯಲ್ಲಿನ ಅಧಿಕಾರಿಗಳು ಹನುಮಮಾಲಾ ವಿಸರ್ಜನೆ ಸಿದ್ಧತೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದರೆ, ಕಾರಣವಿಲ್ಲದೆ ಗೈರಾದರೆ, ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈ ಗೊಳ್ಳಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಿಸುತ್ತಿರಬೇಕು. ವಿಸರ್ಜನೆಯ ದಿನ ಯಾವುದೇ ಅಹಿತಕರ ಘಟನೆ, ಗಲಾಟೆ ನಡೆಯದಂತೆ ಪೊಲೀಸ್ ಇಲಾಖೆ ಸಿಸಿ ಕ್ಯಾಮೆರಾ ಅಳವಡಿಸಿ, ಕಂಟ್ರೋಲ್ ರೂಂ ನಿರ್ಮಾಣ ಮಾಡಿಕೊಳ್ಳಬೇಕು ಎಂದರು.

ಹಾಗೇ ಹನುಮಮಾಲಾ ವಿಸರ್ಜನೆಯ ಹಿಂದಿನ ದಿನದಿಂದಲೇ ಗಂಗಾವತಿ, ಅಂಜನಾದ್ರಿ ಗ್ರಾಮದ ಸುತ್ತಲಿನ ಗ್ರಾಮದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಬೇಕು. ಕುಷ್ಟಗಿ, ಯಲಬುರ್ಗಾ, ಕೊಪ್ಪಳ, ಗಂಗಾವತಿ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಜಿಲ್ಲಾಧಿಕಾರಿ ನಲೀನ್‌ಕುಮಾರ ಅತುಲ್, ಸಿಇಓ ರಾಹುಲ್ ರತ್ನಂ ಪಾಂಡೆ, ಎಡಿಸಿ ಸಾವಿತ್ರಿ ಕಡಿ, ಎಸಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಎಸ್ಪಿ ಯಶೋಧಾ ವಂಟಗೋಡಿ ಸೇರಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT