ಕನಕಗಿರಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವ ಸಚಿವ ಶಿವರಾಜ ತಂಗಡಗಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೋದಿ ಅವರನ್ನು ಜಗತ್ತು ಕೊಂಡಾಡುತ್ತಿದೆ. ಇಂಥ ಸಮಯದಲ್ಲಿ ಯುವಕರು ಮೋದಿ ಅಂತ ಹೇಳಿದರೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ತಂಗಡಗಿ ಕ್ಷುಲ್ಲಕ ಮಾತುಗಳನ್ನಾಡಿದ್ದಾರೆ. ಈ ಕುರಿತು ತಂಗಡಗಿ ಜನರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.
‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ತಿಂಗಳಾಗಿದೆ. ಕ್ಷೇತ್ರದಲ್ಲಿ ಮಟ್ಕಾ, ಇಸ್ಪೀಟ್, ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದೆ, ವಿರೋಧ ಪಕ್ಷದಲ್ಲಿದ್ದಾಗ ಅಕ್ರಮ ಚಟುವಟಿಕೆಗಳ ಕುರಿತು ವೀರಾವೇಷದಿಂದ ಮಾತನಾಡುತ್ತಿದ್ದ ತಂಗಡಗಿ, ಈಗ ಏಕೆ ಮೌನ ವಹಿಸಿದ್ದಾರೆ’ ಎಂದು ಪ್ರಶ್ನಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ ತಂಗಡಗಿ ವಿರುದ್ಧ ಹರಿಹಾಯ್ದರು.
ಪಟ್ಟಣ ಪಂಚಾಯಿತಿ ಸದಸ್ಯ ಸುರೇಶ ಗುಗ್ಗಳಶೆಟ್ರ, ಮಹಿಳಾ ಮೋರ್ಚಾ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಎಸ್ಸಿ ಮೋರ್ಚಾ ಅಧ್ಯಕ್ಷ ಸುಭಾಸ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಹಾದಿಮನಿ, ಗ್ಯಾನಪ್ಪ ಗಾಣದಾಳ, ಉಪಾಧ್ಯಕ್ಷ ರಂಗಪ್ಪ ಕೊರಗಟಗಿ, ಒಬಿಸಿ ಮೋರ್ಚಾ ಅಧ್ಯಕ್ಷ ಹರೀಶ ಪೂಜಾರ, ಮುಖಂಡರಾದ ರಾಚಪ್ಪ ಬ್ಯಾಳಿ, ನಿಂಗಪ್ಪ ನಾಯಕ, ಅರುಣ ಭೂಸನೂರುಮಠ ಪಾಲ್ಗೊಂಡಿದ್ದರು.