ಬಿಜೆಪಿಯಲ್ಲಿ ಗುಂಪುಗಾರಿಕೆ ಇಲ್ಲ: ಬೊಮ್ಮಾಯಿ

ಗಂಗಾವತಿ: ‘ಬಿಜೆಪಿಯಲ್ಲಿ ಮೂಲ ಬಿಜೆಪಿಗರು, ವಲಸಿಗ ಬಿಜೆಪಿಗರು ಎಂದು ಇಲ್ಲ. ಗುಂಪುಗಾರಿಕೆ ಇಲ್ಲ’ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಶನಿವಾರ ಸಂಜೆ ನಗರದ ಶಾಸಕ ಪರಣ್ಣ ಮುನವಳ್ಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎನ್ನುವುದು ಹೊಸ ಬೇಡಿಕೆ ಅಲ್ಲ. ಈ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾ ಕಳೆದ 35 ವರ್ಷಗಳಿಂದ ಹಿಂದಿನ ಎಲ್ಲ ಸರ್ಕಾರಗಳಿಗೆ ಮನವಿ ಮಾಡುತ್ತ ಬಂದಿದೆ ಎಂದರು.
ಆ ಸಂದರ್ಭದಲ್ಲಿ ಪರಿಗಣನೆ ಮಾಡಿಲ್ಲ. ಹಾಗಾಗಿ ಇದೀಗ ಮುಖ್ಯಮಂತ್ರಿಗಳು ಪರಿಗಣನೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನೀಡಿರುವ ತೀರ್ಪುಗಳನ್ನು ಗಮನಿಸುತ್ತೇವೆ. ನಂತರ ಶಿಫಾರಸು ಮಾಡುತ್ತೇವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಮತ್ತೊಂದು ಮಹಿಳಾ ಪೊಲೀಸ್ ಠಾಣೆಗೆ ಬೇಡಿಕೆ ಇದೆ. ಈ ಕುರಿತು ಚರ್ಚಿಸಲಾಗುವುದು. ಶೀಘ್ರದಲ್ಲೇ 16000 ಪೊಲೀಸ್ ಹುದ್ದೆ ಭರ್ತಿ ಮಾಡಲಾಗುವುದು ಎಂದರು.
ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿ ಹೇಳಿದರು.
ಸಂಸದ ಸಂಗಣ್ಣ ಕರಡಿ, ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಪ್ರಮುಖರಾದ ಗಿರೇಗೌಡ, ಸಿದ್ದರಾಮಸ್ವಾಮಿ, ಸಾಗರ್ ಮುನವಳ್ಳಿ ಇದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.