ಕೊಪ್ಪಳ: ಡಿ.18 ರಂದು ಟಿಪ್ಪು ಸುಲ್ತಾನ್ ಜಯಂತಿ ಅದ್ದೂರಿ ಆಚರಣೆ

ಕೊಪ್ಪಳ: ‘ಶೇರ್ ಏ ಮೈಸೂರು ಹಜರತ್ ಟಿಪ್ಪು ಸುಲ್ತಾನ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ವತಿಯಿಂದ ಡಿ.18ರಂದು ಟಿಪ್ಪು ಸುಲ್ತಾನ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಡಿ.ಜಿಲಾನ್ ಕಿಲ್ಲೇದಾರ್ (ಮೈಲೈಕ್) ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘2011 ರಿಂದ ನಮ್ಮ ಸಂಸ್ಥೆಯು ಸಮಾಜ ಮತ್ತು ಪಂಚ ಸಮಿತಿ ಸಹಯೋಗದಲ್ಲಿ ನಿರಂತರವಾಗಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುತ್ತ ಬಂದಿದೆ. ಅಂದಿನ ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವುದಾಗಿ ಘೋಷಣೆ ಮಾಡಿತು. ಆದ್ದರಿಂದ ನಮ್ಮ ಸಂಸ್ಥೆ ವತಿಯಿಂದ ಆಚರಣೆ ಕೈಬಿಟ್ಟು ಸರ್ಕಾರದ ಕಾರ್ಯಕ್ರಮಕ್ಕೆ ಸಹಕಾರ ನೀಡಿದ್ದೆವು’ ಎಂದರು.
ಈಗಿನ ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ರದ್ದುಗೊಳಿಸಿದೆ. ಕಳೆದ 2 ವರ್ಷಗಳಿಂದ ಕೊರೊನಾ ಕಾರಣಕ್ಕೆ ಜಯಂತಿ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಕಾಲ ಕೂಡಿಬಂದಿದೆ. ಈ ವರ್ಷ ನವೆಂಬರ್ ಬದಲಾಗಿ ಡಿ.18 ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.
ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರ. ಅವರನ್ನು ಪ್ರಸ್ತುತ ಸರ್ಕಾರ ಕಡೆಗಣಿಸುವ ಹುನ್ನಾರ ನಡೆಸಿದೆ. ಆದ್ದರಿಂದ ಸರ್ಕಾರಕ್ಕೆ ಸವಾಲಾಗುವ ರೀತಿಯಲ್ಲಿ ಜಯಂತಿ ಆಚರಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಸೈಯದ್ ಸಮೀರ್ ಹುಸೇನಿ, ಸೈಯದ್ ನಾಸೀರ್ ಕಂಠಿ, ಮೆಹೆಬೂಬ್ ಮಚ್ಚಿ, ಫುರಖಾನ್ ಅಹ್ಮದ್ ದಾಗದಾರ್, ಪೀರ್ಸಾಬ್ ಬೆಳಗಟ್ಟಿ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.