ಕುಷ್ಟಗಿ: ಕೋವಿಡ್ ಮಾರ್ಗಸೂಚನೆಗಳನ್ನು ಉಲ್ಲಂಘಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ತಾಲ್ಲೂಕಿನ ತಾವರಗೇರಾ ಪಟ್ಟಣದ ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ಬುಧವಾರ ದಿಢೀರನೇ ದಾಳಿ ನಡೆಸಿದರು.
ಒಟ್ಟು ಆರು ಖಾಸಗಿ ಕ್ಲಿನಿಕ್ಗಳ ಮೇಲೆ ತಹಶೀಲ್ದಾರ್ ಎಂ.ಸಿದ್ದೇಶ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶರಣಪ್ಪ ಮೂಲಿಮನಿ ಮತ್ತು ಸಬ್ ಇನ್ಸ್ಪೆಕ್ಟರ್ ಗೀತಾಂಜಲಿ ಸಿಂಧೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಅನೇಕ ಖಾಸಗಿ ವೈದ್ಯರು ತಮ್ಮ ಕ್ಲಿನಿಕ್ಗಳಲ್ಲಿ ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದುದು ಅಧಿಕಾರಿಗಳ ಗಮನಕ್ಕೆ ಬಂದಿತು.
ನೆಗಡಿ, ಕೆಮ್ಮು, ಜ್ವರ, ಗಂಟಲು ನೋವು ಕೊರೊನಾ ಸಂಬಂಧಿ ಇತರೆ ಲಕ್ಷಣಗಳು ಇದ್ದರೆ ಅಂಥ ರೋಗಿಗಳ ಬಗ್ಗೆ ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು. ಅಂಥ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಶಿಫಾರಸು ಮಾಡಬೇಕು. ತಾಲ್ಲೂಕಿನ ಎಲ್ಲ ಖಾಸಗಿ ವೈದ್ಯರಿಗೆ ತಹಶೀಲ್ದಾರ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಲಾಕ್ಡೌನ್ ಸಂದರ್ಭದಲ್ಲಿ ನಡೆಸಿದ ಸಭೆಯಲ್ಲಿ ಈ ಬಗ್ಗೆ ಹಿರಿಯ ಅಧಿಕಾರಿಗಳು ನೀಡಿದ ಸೂಚನೆಯನ್ನು ಖಾಸಗಿ ವೈದ್ಯರು ನಿರ್ಲಕ್ಷಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಖಾಸಗಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಅಧಿಕಾರಿಗಳು, ಇನ್ನು ಮುಂದೆ ಕಡ್ಡಾಯವಾಗಿ ರೋಗಿಗಳ ವಿವರವನ್ನು ದಾಖಲಿಸಬೇಕು. ಶಂಕಿತ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ಕಡ್ಡಾಯವಾಗಿ ಶಿಫಾರಸು ಮಾಡಬೇಕು. ಮೂರು ದಿನಗಳ ನಂತರ ಪುನಃ ಆಸ್ಪತ್ರೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಅನಧಿಕೃತವಾಗಿ ತೆರೆಯಲಾಗಿದ್ದ ಕ್ಲಿನಿಕ್ಗಳಿಗೆ ಬೀಗಹಾಕಿದ ಅಧಿಕಾರಿಗಳು ದಾಖಲೆಗಳನ್ನು ಹಾಜರುಪಡಿಸುವಂತೆ ಸಂಬಂಧಿಸಿದವರಿಗೆ ತಾಕೀತು ಮಾಡಿದರು ಎಂದು ತಿಳಿಸಲಾಗಿದೆ.
ತಾವರಗೇರಾದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ಸಾವಿನ ಪ್ರಮಾಣವು ಏರುತ್ತಿರುವುದು ಅಧಿಕಾರಿಗಳ ಕಳವಳಕ್ಕೆ ಕಾರಣವಾಗಿತ್ತು. ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗೆ ಬರುವ ಸೋಂಕಿನ ಲಕ್ಷಣಗಳಿರುವ ರೋಗಿಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡದೆ ಚಿಕಿತ್ಸೆ ನೀಡುವುದನ್ನು ಮುಂದುವರೆಸಿದ್ದರು. ಈ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಹಶೀಲ್ದಾರ್ ಎಂ.ಸಿದ್ದೇಶ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶರಣಪ್ಪ ಮೂಲಿಮನಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.