ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಷಾ ಬೆಳವಣಿಗೆ ಬಯಸುವವರು ಅಧ್ಯಕ್ಷರಾಗಲಿ: ಹನುಮಂತಪ್ಪ ಅಂಡಗಿ ಚಿಲವಾಡಗಿ

Last Updated 14 ಫೆಬ್ರುವರಿ 2021, 13:28 IST
ಅಕ್ಷರ ಗಾತ್ರ

ಗಂಗಾವತಿ: ‘ಕನ್ನಡಿಗರ ಬಗ್ಗೆ ಪ್ರಾಮಾಣಿಕ ಕಳಕಳಿ ಇರುವವರು ಮತ್ತು ಕನ್ನಡ ಭಾಷೆ ಬೆಳವಣಿಗೆ ಬಯಸುವವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಬೇಕು’ ಎಂದು ಸಾಹಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಹನುಮಂತಪ್ಪ ಅಂಡಗಿ ಚಿಲವಾಡಗಿ ಹೇಳಿದರು.

‘ನನ್ನದು ಸಾಹಿತಿಗಳ, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಬಣ. ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳೆಲ್ಲರೂ ಸೇರಿ ಅವಿರೋಧವಾಗಿ ಆಯ್ಕೆ ಮಾಡಬೇಕು. ಸ್ಪರ್ಧಿಸಿದ ಅಭ್ಯರ್ಥಿಗಳೆಲ್ಲರೂ ಸೇರಿ ಪ್ರಚಾರ ಮಾಡಬೇಕು. ಇದರಿಂದ ಇತರ ಚುನಾವಣೆಗಳಿಗೆ ಮಾದರಿಯಾಗಲು ಸಾಧ್ಯವಾಗುತ್ತದೆ. ಆದರೆ, ಇತ್ತೀಚೆಗೆ ವ್ಯಕ್ತಿಗಳ ಹೆಸರಿನಲ್ಲಿ ಬಣಗಳು ಹುಟ್ಟಿಕೊಂಡಿರುವುದು ದುರದೃಷ್ಟಕರ ಸಂಗತಿ. ಸಂಘಟನೆಯ ಹೆಸರಿನಲ್ಲಿ ಸಾಹಿತಿಗಳಲ್ಲದವರು ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವುದು ನೋವಿನ ಸಂಗತಿ’ ಎಂದು ಹೇಳಿದರು.

‘ಕನ್ನಡಮ್ಮನ ಸೇವೆ ಮಾಡಲು ಚುನಾವಣೆ ಪ್ರಣಾಳಿಕೆ ಸಿದ್ದಪಡಿಸಿದ್ದು, ಕೊಪ್ಪಳದಲ್ಲಿ ಡಾ.ಸಿದ್ಧಯ್ಯ ಪುರಾಣಿಕರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆರಂಭಿಸುವಂತೆ ಒತ್ತಾಯಿಸುತ್ತೇನೆ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಮಹಿಳಾ ಸಾಹಿತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತೇನೆ. ಯುವಬರಹಗಾರ ಕೃತಿಗಳನ್ನು ಪ್ರಕಟಿಸುವುದು ಸೇರಿ ಹಲವು ಕಾರ್ಯಕ್ರಮ ಆಯೋಜಿಸಬೇಕು ಎನ್ನುವುದು ನನ್ನ ಸಂಕಲ್ಪವಾಗಿದೆ. ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಅಜೀವ ಸದಸ್ಯರು ನನಗೆ ಮತ ನೀಡಿ ಬಹುಮತದಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸೈನಿಕ ಎಂ.ಬಿ.ಅಳವಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT